ನ.3ರಿಂದ ಜೆಡಿಎಸ್ ಚುನಾವಣಾ ಪ್ರಚಾರ
Team Udayavani, Oct 26, 2017, 8:12 AM IST
ಬೆಂಗಳೂರು: ಮುಂದಿನ ವಿದಾನಸಭೆ ಚುನಾವಣೆಗೆ ಜೆಡಿಎಸ್ ನ.3 ರಿಂದ ಅಧಿಕೃತವಾಗಿ ಪ್ರಚಾರ ಆರಂಭಿಸಲಿದೆ.
ಮೈಸೂರಿನ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಪ್ರಚಾರ ಪ್ರಾರಂಭಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದೇವೆ. ಶತಾಯ ಗತಾಯ ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರ ಯಾರಿಗೂ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಕಾಂಗ್ರೆಸ್ನಿಂದ ಉಚ್ಛಾಟನೆಗೊಂಡಿದ್ದ ದೇವರ ಹಿಪ್ಪರಗಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅದೇ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಪಾಟೀಲ್ ಹಾಗೂ ತಮ್ಮ ನಡುವೆ ಹಲವು ವರ್ಷಗಳ ಉತ್ತಮ ಗೆಳೆತನವಿದೆ ಎಂದು ಹೇಳಿದರು.
ಷರತ್ತು ಸಡಿಲಿಕೆಗೆ ಕೋರ್ಟ್ ಮೊರೆ
ಬೆಂಗಳೂರು: ಜಂತಕಲ್ ಎಂಟರ್ಪ್ರೈಸಸ್ ಕಂಪೆನಿಗೆ ಪರವಾನಗಿ ನೀಡಲು ಸಹಕರಿಸಿದ ಆರೋಪ ಪ್ರಕರಣದಲ್ಲಿ ದೊರೆತಿರುವ ನಿರೀಕ್ಷಣಾ ಜಾಮೀನಿನ ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಮಾಜಿ ಸಿಎಂ ಎಚ್.ಡಿ ಕುಮಾರ ಸ್ವಾಮಿಗೆ ಹೈಕೋರ್ಟ್ ಮೊರೆಹೋಗಿದ್ದಾರೆ. ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಎಸ್ಐಟಿ ಮುಂದೆ 15 ದಿನಗಳಿಗೊಮ್ಮೆ ಹಾಜರಾಗಲು ಕಷ್ಟ ವಾಗುತ್ತಿದೆ. ಈ ನಿಟ್ಟಿನಲ್ಲಿ ಈ ಷರತ್ತಿನಿಂದ ಸಡಿಲಿಕೆ ನೀಡುವಂತೆ ಕುಮಾರಸ್ವಾಮಿ ಕೋರಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ಬುಧವಾರ ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿ ಆರ್.ಬಿ ಬೂದಿಹಾಳ್ ಅವರಿದ್ದ ಏಕಸದಸ್ಯಪೀಠ, ಅರ್ಜಿದಾರರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿರುವ ನ್ಯಾಯಪೀಠ ಕಲಬುರಗಿ ಪೀಠದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಅರ್ಜಿ ಅವರೇ ವಿಚಾರಣೆ
ನಡೆಸಬೇಕಿದೆ. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅರ್ಜಿ ವಿಚಾರಣೆ ನಡೆಯಲಿ ಎಂದು ಅಭಿಪ್ರಾಯಪಟ್ಟು ಅ.27ಕ್ಕೆ ವಿಚಾರಣೆ ಮುಂದೂಡಿತು.