Karnataka: ಗೃಹಲಕ್ಷ್ಮೀಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ
Team Udayavani, Jul 19, 2023, 7:54 AM IST
ಬೆಂಗಳೂರು: ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ, ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿದೆ. ಇದೀಗ ಬಹುನಿರೀಕ್ಷಿತ 4ನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆಗೆ ಬುಧವಾರ ಚಾಲನೆ ನೀಡಲಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ಸ್ವೀಕರಿಸಿದ ಬಳಿಕ ಚುನಾವಣೆ ವೇಳೆ ಘೋಷಿಸಿದ ಗ್ಯಾರಂಟಿಗಳ ಅನುಷ್ಠಾನಕ್ಕೆ ಮುಂದಾಗಿತ್ತು. ಶಕ್ತಿ ಹಾಗೂ ಅನ್ನಭಾಗ್ಯ ಯೋಜನೆಯ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳುತ್ತಿದ್ದಾರೆ. ಗೃಹ ಜ್ಯೋತಿ ಯೋಜನೆಯೂ ಈಗಾಗಲೇ ಜಾರಿ ಹಂತದಲ್ಲಿದೆ. ಈಗ 4ನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.
ರಾಜ್ಯದಲ್ಲಿ ಒಟ್ಟು 1.28 ಕೋಟಿ ಅರ್ಹ ಮಹಿಳೆಯರು ಯೋಜನೆಯ ಲಾಭ ಪಡೆಯಲಿದ್ದಾರೆ. ಮಾಸಿಕ 2,560 ಕೋಟಿ ರೂ.ಗಳಂತೆ ವಾರ್ಷಿಕ 30,720 ಕೋಟಿ ಆಗಲಿದೆ. ಆ.16 ರಿಂದ ಕುಟುಂಬದ ಮುಖ್ಯಸ್ಥೆಯ ಖಾತೆಗೆ 2 ಸಾವಿರ ರೂ. ಜಮಾ ಆಗಲಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಂಜೂರಾತಿ ಆದೇಶ ಹಂಚಿಕೆ ಮಾಡಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಇಲಾಖೆ ಲಕ್ಷ್ಮೀ ಆರ್. ಹೆಬ್ಟಾಳ್ಕರ್ ಯೋಜನೆಯ ಲಾಂಛನ ಮತ್ತು ಪೋಸ್ಟರ್ ಅನಾವರಣಗೊಳಿಸಲಿದ್ದಾರೆ.