ಕಿಸಾನ್ ಸಮ್ಮಾನ್ ಯೋಜನೆ ಹೆಚ್ಚುವರಿ ಪ್ರೋತ್ಸಾಹ ಧನ
Team Udayavani, Aug 15, 2019, 3:00 AM IST
ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ರೈತರ ಖಾತೆಗೆ ಮೊದಲ ಕಂತಿನ ಹಣ ಎರಡು ಸಾವಿರ ರೂ.ಗಳನ್ನು ಜಮೆ ಮಾಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಡಿಬಿಟಿ ಮೂಲಕ ಒಂದು ಲಕ್ಷ ರೈತರ ಖಾತೆಗಳಿಗೆ ತಲಾ 2 ಸಾವಿರ ರೂ. ಜಮೆ ಮಾಡಲಾಯಿತು.
ಆದಷ್ಟು ಬೇಗ ಎಲ್ಲ ಅರ್ಹ ರೈತರ ಖಾತೆಗಳಿಗೆ ಹಣ ಜಮೆ ಮಾಡುವಂತೆ ಅಧಿಕಾರಿಗಳಿಗೆ ಇದೇ ವೇಳೆ ಸಿಎಂ ಸೂಚನೆ ನೀಡಿದರು. ನಂತರ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಬರ ಹಾಗೂ ಪ್ರವಾಹದಿಂದ ರೈತರು ಸಂಕಷ್ಟದಲ್ಲಿರುವಾಗ ರಾಜ್ಯ ಸರ್ಕಾರದಿಂದಲೂ 2ಕಂತುಗಳಲ್ಲಿ 4 ಸಾವಿರ ರೂ.ಜಮೆ ಮಾಡಲು ತೀರ್ಮಾನ ಕೈಗೊಂಡಿದ್ದೇವೆ. ಅದರ ಪ್ರಕಾರ 2,200 ಕೋಟಿ ರೂ.ಅನುದಾನ ನಿಗದಿಪಡಿಸಲಾಗಿದೆ. ಮೊದಲ ಕಂತಾಗಿ 753.16 ಕೋಟಿ ರೂ.ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.