ಕೆಎಂಎಫ್: ಹೈಕೋರ್ಟ್ ಮೆಟ್ಟಿಲೇರಿದ ರೇವಣ್ಣ
Team Udayavani, Jul 31, 2019, 5:35 AM IST
ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್)ದ ಅಧ್ಯಕ್ಷ ಸ್ಥಾನಕ್ಕೆ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಿ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಹಾಗೂ ಚುನಾವಣಾ ಪ್ರಕ್ರಿಯೆ ಯಾವ ಹಂತದಲ್ಲಿ ಸ್ಥಗಿತಗೊಂಡಿತ್ತೋ ಅಲ್ಲಿಂದಲೇ ಮುಂದುವರಿಸುವಂತೆ ಚುನಾವಣಾಧಿಕಾರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಚುನಾವಣಾ ವೇಳಾಪಟ್ಟಿಯೂ ಪ್ರಕಟಗೊಂಡಿತ್ತು. ಪಟ್ಟಿಯ ಅನುಸಾರ ಜುಲೈ 29ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಚುನಾವಣೆಯನ್ನು ಮುಂದೂಡಿ ಅದೇ ದಿನ ಆದೇಶ ಹೊರಡಿಸಿದ್ದಾರೆ. ಈ ರೀತಿ ಆದೇಶ ಹೊರಡಿಸಲು ಕಾರ್ಯದರ್ಶಿಗೆ ಯಾವುದೇ ಅಧಿಕಾರ ಇಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ. ಅಧ್ಯಕ್ಷ ಹುದ್ದೆಗೆ ತಾವೊಬ್ಬರೇ ಅರ್ಜಿ ಸಲ್ಲಿಸಿದ್ದು, ತಾವೇ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇತ್ತು. ಅದನ್ನು ತಪ್ಪಿಸುವ ದುರುದ್ದೇಶದಿಂದ ಚುನಾವಣೆಯನ್ನು ಮುಂದೂಡಿ ಆದೇಶಿಸಲಾಗಿದೆ ಎಂದು ರೇವಣ್ಣ ಆರೋಪಿಸಿದ್ದಾರೆ.