Minister ವಿರುದ್ಧ ರಾಜ್ಯಪಾಲರಿಗೆ ಪತ್ರ: ಇಬ್ಬರು ಕೃಷಿ ಅಧಿಕಾರಿಗಳು ಕಸ್ಟಡಿಗೆ
Team Udayavani, Aug 21, 2023, 11:30 PM IST
ಮಂಡ್ಯ: ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿ ಮಂಡ್ಯ ಜಿಲ್ಲೆಯ ಏಳು ತಾಲೂಕುಗಳ ಸಹಾಯಕ ಕೃಷಿ ಅಧಿ ಕಾರಿಗಳ ಹೆಸರಿನಲ್ಲಿ ರಾಜ್ಯಪಾಲರಿಗೆ ದೂರು ಅರ್ಜಿ ಬರೆದ ಪ್ರಕರಣಕ್ಕೆ ಸಂಬಂಧಿಸಿ ರವಿವಾರ ಮೈಸೂರಿನ ಇಬ್ಬರು ಕೃಷಿ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದ ಸಿಐಡಿ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ರವಿವಾರ ಬೆಳಗ್ಗೆಯೇ ಮೈಸೂರಿನ ಕೆ.ಆರ್.ನಗರ ತಾಲೂಕಿನ ಸಹಾಯಕ ಕೃಷಿ ಅಧಿ ಕಾರಿ ಗುರುಪ್ರಸಾದ್ ಹಾಗೂ ಸಹಾಯಕ ಅಧಿ ಕಾರಿ ಸುದರ್ಶನ್ ಅವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ಸಂಜೆವರೆಗೂ ವಿಚಾರಣೆ ನಡೆಸಲಾಗಿದೆ. ಬಳಿಕ ಇಬ್ಬರನ್ನೂ ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿ ಐದು ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಧಿಧೀಶರು ಮೂರು ದಿನ ಸಿಐಡಿ ಕಸ್ಟಡಿ ವಿಧಿಸಿದರು.
ಗುರುಪ್ರಸಾದ್ ಹಾಗೂ ಸುದರ್ಶನ್ ಅವರನ್ನು ಸುದೀರ್ಘ ವಿಚಾರಣೆ ನಡೆಸಲಾಗುತ್ತಿದೆ. ಸಚಿವರ ವಿರುದ್ಧ ರಾಜ್ಯಪಾಲರಿಗೆ ಬರೆದಿದ್ದ ದೂರು ಅರ್ಜಿಗೆ ಸಹಾಯಕ ಕೃಷಿ ನಿರ್ದೇಶಕರ ಹೆಸರಿನಲ್ಲಿ ನಕಲಿ ಸಹಿ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.