ಲಿಂಗಾಯತ ಧರ್ಮ ಮಾನ್ಯತೆ ವಿವಾದ: ತಡೆಯಾಜ್ಞೆಗೆ ನಕಾರ
Team Udayavani, Mar 10, 2018, 8:15 AM IST
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆ ಕುರಿತು ತಜ್ಞರ ಸಮಿತಿಯ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸರ್ಕಾರ ಅನುಸರಿಸುವ ಪ್ರಕ್ರಿಯೆಗಳಲ್ಲಿ ತಾನು ಮಧ್ಯಪ್ರವೇಶಿಸುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವಿವಾದಕ್ಕೆ ಸಂಬಂಧಿಸಿದ ಸರ್ಕಾರದ ನಡಾವಳಿಗಳಿಗೆ ತಡೆಯಾಜ್ಞೆ ನೀಡಲು ನ್ಯಾಯಾಲಯ ನಿರಾಕರಿಸಿದೆ.
ತಜ್ಞರ ಸಮಿತಿ ನೇಮಕಗೊಳಿಸಿ ರಾಜ್ಯ ಅಲ್ಪ ಸಂಖ್ಯಾತ ಆಯೋಗ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಎಂ. ಸತೀಶ್ ಸೇರಿ ಇತರರಿಂದ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಶುಕ್ರವಾರ ನ್ಯಾ. ದಿನೇಶ್ ಮಹೇಶ್ವರಿ ಹಾಗೂ ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ವಿಭಾಗೀಯ ಪೀಠ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ತಜ್ಞರ ಸಮಿತಿ ಈಗಾಗಲೇ ಸರ್ಕಾರಕ್ಕೆ ವರದಿ ನೀಡಿದ್ದು ಸಂಪುಟದಲ್ಲಿ ಚರ್ಚೆ ನಡೆಸಿದೆ. ಒಂದು ವೇಳೆ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಸರ್ಕಾರ ಒಪ್ಪಿಗೆ ನೀಡುವುದು ಅಥವಾ ಕೇಂದ್ರಕ್ಕೆ ಶಿಫಾರಸು ಮಾಡಿದರೆ, ರಾಜ್ಯದಲ್ಲಿ ಸಾಮಾಜಿಕ ಸಂಘರ್ಷ ಉಂಟಾಗಲಿದೆ.
ಹೀಗಾಗಿ ಧರ್ಮ ಮಾನ್ಯತೆಗೆ ಸಂಬಂಧಿಸಿದಂತೆ ಯಾವುದೇ ಕ್ರಮ ತೆಗೆದುಕೊಳ್ಳದಂತೆ ನಿರ್ದೇಶಿಸುವಂತೆ ನ್ಯಾಯಪೀಠಕ್ಕೆ ಕೋರಿದರು.
ಈ ವಾದವನ್ನು ತಳ್ಳಿಹಾಕಿದ ನ್ಯಾಯಪೀಠ, ಧರ್ಮ ಮಾನ್ಯತೆ ವಿಚಾರದಲ್ಲಿ ನಿಮ್ಮ ಕಲ್ಪನೆಗಳು ಅತಿಯಾಗಿವೆ. ಶಾಸಕಾಂಗ ಕೈಗೊಳ್ಳುವ ನಿರ್ಧಾರಗಳಲ್ಲಿ ನ್ಯಾಯ ಪೀಠ ಏಕೆ ಮಧ್ಯಪ್ರವೇಶಿಸಬೇಕು. ಆದರೆ, ಏನೇ ತೀರ್ಮಾನ ಕೈಗೊಂಡರೂ ಈ ಅರ್ಜಿಗಳ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ತಿಳಿಸಿತು. ಅಲ್ಲದೆ, ಅರ್ಜಿಗಳಿಗೆ ಸಂಬಂಧಿಸಿದ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿದ ನ್ಯಾಯಪೀಠ ಮಾ.15ಕ್ಕೆ ವಿಚಾರಣೆ ಮುಂದೂಡಿತು.