ದೇವರೇ ಕಾಪಾಡಬೇಕು ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಶ್ರೀರಾಮುಲು
Team Udayavani, Jul 16, 2020, 5:21 PM IST
ಬೆಂಗಳೂರು: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್-19 ಸೋಂಕು ಇನ್ನಷ್ಟು ಹೆಚ್ಚಳವಾಗುತ್ತದೆ. ರಾಜ್ಯದ ಜನರನ್ನು ದೇವರೇ ಕಾಪಾಡಬೇಕು ಎಂದು ಹೇಳಿಕೆ ನೀಡಿದ್ದ ಆರೋಗ್ಯ ಸಚಿವ ಬಿ ಶ್ರೀರಾಮುಲು ಇಂದು ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದಾರೆ.
ಆರೋಗ್ಯ ಸಚಿವ ಹೇಳಿಕೆಗೆ ಟೀಕೆಗಳು ಎದುರಾಗಿತ್ತು. ಕೋವಿಡ್-19 ಪಿಡುಗಿನಿಂದ ಜನರನ್ನು ಕಾಪಾಡಲು ನಿಮ್ಮಿಂದ ಸಾಧ್ಯವಾಗದಿದ್ದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟೀಕಿಸಿದ್ದರು.
ಈ ಕುರಿತು ಟ್ವೀಟ್ ಮಾಡಿದ ರಾಮುಲು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೇ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸೋಂಕು ಹೆಚ್ಚಾಗಲು, ಸರ್ಕಾರದ ನಿರ್ಲಕ್ಷ್ಯ, ಮಂತ್ರಿಗಳ ಬೇಜವಾಬ್ದಾರಿ, ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸುವ ಸಂದರ್ಭದಲ್ಲಿ, ಆರೋಪಗಳು ‘ಸತ್ಯಕ್ಕೆ ದೂರವಾದದ್ದು’, ‘ಸೋಂಕು ತಡೆಯಲು ಜನರಲ್ಲಿ ಜಾಗೃತಿ ಬರಬೇಕು, ಸೋಂಕು ತಡೆಯುವಲ್ಲಿ ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಇಲ್ಲಿ ಎಡವಿದರೆ ಪರಿಸ್ಥಿತಿ ಕ್ಲಿಷ್ಟಕರ’ ಎಂದು ಹೇಳುವ ಸಂರ್ಭದಲ್ಲಿ, ‘ಇನ್ನೂ ಎಡವಿದರೆ ದೇವರೇ ಕಾಪಾಡಬೇಕು’ ಎಂದು ಹೇಳಿದ ಎಚ್ಚರಿಕೆಯ ಮಾತುಗಳು ಅವು ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಜನರ ರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ: ಡಿ.ಕೆ ಶಿವಕುಮಾರ್ ಆಗ್ರಹ
ಸರ್ಕಾರ, ನಮ್ಮ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರು ಹಾಗೂ ಸಚಿವರುಗಳು ಹಗಲಿರುಳೂ ಕೆಲಸ ಮಾಡುತ್ತಿದ್ದೇವೆ. ಈ ಶತಮಾನದ ಸವಾಲೊಂದನ್ನು ಸಮರ್ಥವಾಗಿ ಎದುರಿಸಿ ಗೆಲ್ಲಲು, ಜನರಿಗಾಗಿ ದುಡಿಯುತ್ತಿದ್ದೇವೆ ಎಂದಿದ್ದಾರೆ.
ಮಾನ್ಯ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರೇ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ.
ಸೋಂಕು ಹೆಚ್ಚಾಗಲು, ಸರ್ಕಾರದ ನಿರ್ಲಕ್ಷ್ಯ, ಮಂತ್ರಿಗಳ ಬೇಜವಾಬ್ದಾರಿ, ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸುವ ಸಂದರ್ಭದಲ್ಲಿ, 1/2
— B Sriramulu (@sriramulubjp) July 16, 2020