ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಅರಣ್ಯ ಖಾತೆ ಸಚಿವ ಸಿ.ಸಿ.ಪಾಟೀಲ
Team Udayavani, Dec 22, 2019, 3:07 AM IST
ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಹಾಗೂ ಅರಣ್ಯ ಖಾತೆ ಸಚಿವ ಸಿ.ಸಿ.ಪಾಟೀಲ ಅವರು ಶನಿವಾರ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಇದ್ದಾಗ ಪ್ರತಿ ಸಚಿವರು ವಾರದಲ್ಲಿ ಒಂದು ದಿನ ಅಥವಾ ಅರ್ಧ ದಿನ ಪಕ್ಷದ ಕಚೇರಿಗೆ ಬಂದು, ಕಾರ್ಯಕರ್ತರ ಅಹವಾಲು ಸ್ವೀಕರಿಸಿ, ಸಮಸ್ಯೆ ಪರಿಹರಿಸುವ ಸಂಪ್ರದಾಯವನ್ನು ಇಟ್ಟುಕೊಂಡಿದ್ದೇವೆ.
ಈ ಕಾರ್ಯಕ್ರಮವು ಸಚಿವರು ಮತ್ತು ಕಾರ್ಯಕರ್ತರ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಯಾವ ನೂನ್ಯತೆಗಳಿವೆ ಎಂದು ಹೇಳದೆಯೇ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಶಾಂತಿಗೆ ಹೆಸರಾದ ಕರ್ನಾಟಕದ ಜನರು ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಬೇಕು. ಗಲಭೆಗಳಿಗೆ ಅವಕಾಶ ನೀಡಬಾರದು. ಪ್ರತಿಪಕ್ಷಗಳ ಪ್ರಚೋದನಾತ್ಮಕ ಹೇಳಿಕೆಗಳಿಂದ ಶಾಂತಿಗೆ ಭಂಗವಾಗುತ್ತಿದೆ ಎಂದು ದೂರಿದರು.
ಮಹದಾಯಿ ಕುರಿತಂತೆ ರಾಜ್ಯಕ್ಕೆ ಶೀಘ್ರದಲ್ಲೇ ಸಿಹಿಸುದ್ದಿ ದೊರೆಯಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾಬ್ಡೇಕರ್ ಹೇಳಿದ್ದಾರೆ. ಮಹದಾಯಿ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದ ಬದ್ಧತೆಯನ್ನು ಪ್ರಶ್ನಿಸುವಂತಿಲ್ಲ. ಯಡಿಯೂರಪ್ಪ ಅವರು ಹಿಂದಿನ ಸರ್ಕಾರದಲ್ಲಿ ಯೋಜನೆಗೆ 150 ಕೋಟಿ ರೂ.ಮೀಸಲಿರಿಸಿದ್ದರು. ರಾಜ್ಯಕ್ಕೆ ಅನ್ಯಾಯವಾಗದಂತೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡುವ ನಿರೀಕ್ಷೆ ಇದೆ ಎಂದು ಹೇಳಿದರು.