ಮಾಲಿನ್ಯ ತಪಾಸಣೆಗೆ ಮೂರು ತುರ್ತುಸ್ಪಂದನ ವಾಹನಗಳಿಗೆ ಸಚಿವ ಯೋಗೇಶ್ವರ್ ಚಾಲನೆ
Team Udayavani, Jul 1, 2021, 2:30 PM IST
ಬೆಂಗಳೂರು: ರಾಜ್ಯ ಪರಿಸರ ಮಾಲಿನ್ಯ ಮಂಡಳಿಯು ವೃಷಭಾವತಿ ಕಣಿವೆ ವ್ಯಾಪ್ತಿಯಲ್ಲಿರುವ ಕೈಗಾರಿಕೆಗಳು ಹಾಗೂ ಉದ್ದಿಮೆಗಳಿಂದಾಗುವ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಾಲಿನ್ಯ ತಪಾಸಣೆ ಮಾಡಲು ಮೂರು ತುರ್ತು ಸ್ಪಂದನ ವಾಹನಗಳನ್ನು ನಿಯೋಜನೆ ಮಾಡಿದೆ. ಪರಿಸರ, ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಇಂದು ವಿಧಾನಸೌಧದ ಆವರಣದಲ್ಲಿ ತುರ್ತು ಸ್ಪಂದನ ವಾಹನಗಳಿಗೆ ಚಾಲನೆ ನೀಡಿ ಸೇವೆಗೆ ಸಮರ್ಪಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವೃಷಭಾವತಿ ಕಣಿವೆ ಪ್ರದೇಶದಲ್ಲಿ ಮಾಲಿನ್ಯ ತಡೆಗಟ್ಟುವಂತೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ಮಾಲಿನ್ಯ ನಿಯಂತ್ರಿಸಲು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.
ಬೆಂಗಳೂರು ನಗರದಲ್ಲಿ ವೃಷಭಾವತಿ ಕಣಿವೆ ಸೇರಿದಂತೆ ಇತರೆಡೆ ಅಧಿಕ ಪ್ರಮಾಣದಲ್ಲಿ ಕೈಗಾರಿಕೆ ತ್ಯಾಜ್ಯದಿಂದ ಮಾಲಿನ್ಯವಾಗುತ್ತಿದೆ. ಈ ಬಗ್ಗೆ ಸಹ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಳೆದ 8 ತಿಂಗಳಿಂದ ಶಾಶ್ವತ ಅಧ್ಯಕ್ಷರಿಂದ ಅವರನ್ನು ಸಹ ತ್ವರಿತವಾಗಿ ನೇಮಕ ಮಾಡಬೇಕಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಶ್ರೀನಿವಾಸಲು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.