ಜ.3ರಂದು ರೈತರ ಸಮಾವೇಶಕ್ಕೆ ಮೋದಿ?
Team Udayavani, Dec 23, 2019, 3:00 AM IST
ತುಮಕೂರು: ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜ.3ರಂದು ನಡೆಸಲು ಉದ್ದೇಶಿಸಿರುವ ರೈತರ ಸಮಾವೇಶದಲ್ಲಿ 2ನೇ ಹಂತದ ರೈತ ಸಮ್ಮಾನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುವ ಸಾಧ್ಯತೆ ಇದ್ದು, ಇನ್ನೂ ಖಚಿತವಾಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿ, ಇಲ್ಲಿಂದಲೇ 2ನೇ ಹಂತದ ರೈತ ಸಮ್ಮಾನ್ ಯೋಜನೆಗೆ ಚಾಲನೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಬಯಸಿದ್ದಾರೆ.
ಜ.3ರಂದು ಬೆಳಗ್ಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿರುವ ಪ್ರಧಾನಿ, ಮಠದಲ್ಲಿ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಅರ್ಧ ಗಂಟೆ ಮಠದಲ್ಲಿ ಕಾಲ ಕಳೆಯಲಿದ್ದಾರೆ. ನಂತರ, ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ರೈತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ತುಮಕೂರಿನಲ್ಲಿ ಫುಡ್ಪಾರ್ಕ್ ಸ್ಥಾಪನೆಯಾಗಿದ್ದು, ರೈತರ ಆದಾಯ ದ್ವಿಗುಣ ಮಾಡಬೇಕೆಂಬ ಆಶಯ ಪ್ರಧಾನಿ ನರೇಂದ್ರ ಮೋದಿಯವರದ್ದಾಗಿದೆ ಎಂದರು.