ರಾಜ್ಯಕ್ಕೆ ನಿತಿನ್ ಗಡ್ಕರಿ ಭೇಟಿ: ಸಿಎಸ್ ಜತೆ ಬಿಎಸ್ವೈ ಸಭೆ
Team Udayavani, Dec 8, 2019, 3:00 AM IST
ಬೆಂಗಳೂರು: ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ನೆರವಿನೊಂದಿಗೆ ರಾಜ್ಯ ಸರ್ಕಾರ ರೂಪಿಸಿರುವ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಮಾಹಿತಿ ಪಡೆದುಕೊಂಡರು.
ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಜತೆ ಡಾಲರ್ ಕಾಲೋನಿ ನಿವಾಸದಲ್ಲಿ ಸಭೆ ನಡೆಸಿದ ಮುಖ್ಯಮಂತ್ರಿ, ರಾಜ್ಯಕ್ಕೆ ಕೇಂದ್ರದಿಂದ ತುರ್ತು ಆಗಬೇಕಾಗಿರುವ ಕೆಲಸಗಳ ಬಗ್ಗೆ ವಿವರ ಪಡೆದರು. ಪ್ರಮುಖವಾಗಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಹಾನಿಯಾಗಿದ್ದು, ಕೇಂದ್ರ ಸಚಿವರ ಜತೆ ಆಗಮಿಸುವ ಅಧಿಕಾರಿಗಳಿಗೆ ಆದರ ಬಗ್ಗೆ ಗಮನ ಸೆಳೆಯುವಂತೆ ಸೂಚಿಸಿದರು.