ಹೊಸ ಎಂಜಿನಿಯರಿಂಗ್ ಕಾಲೇಜು ಇಲ್ಲ: ಅಶ್ವತ್ಥ ನಾರಾಯಣ
Team Udayavani, Feb 18, 2022, 6:23 AM IST
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಎಂಜಿನಿಯರಿಂಗ್ ಕಾಲೇಜು ಮಂಜೂರು ಮಾಡುವ ಉದ್ದೇಶ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಭೂಸನೂರು ರಮೇಶ್ ಬಾಳಪ್ಪ ಅವರ ಪ್ರಸ್ತಾವಕ್ಕೆ ಮಾತನಾಡಿದ ಅವರು, ಈಗಿರುವ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟುಗಳು ಉಳಿಯುತ್ತಿವೆ. ಹೀಗಾಗಿ, ಮತ್ತೆ ಹೊಸದಾಗಿ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಅನುಮತಿ ನೀಡುವುದಿಲ್ಲ ಎಂದು ಹೇಳಿದರು.
ರಮೇಶ್ ಭೂಸನೂರು ಅವರು, ಸಿಂಧಗಿ ಕ್ಷೇತ್ರದಲ್ಲಿ ಸರಕಾರಿ ಎಂಜಿನಿಯರ್ ಕಾಲೇಜು ಆರಂಭಿಸುವಂತೆ ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ವಿಜಯಪುರ ಜಿಲ್ಲೆಯ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಶೇ. 50, ಶೇ. 75 ಸೀಟು ಖಾಲಿ ಇದೆ. ಹೀಗಾಗಿ ಹೊಸ ಕಾಲೇಜು ಆರಂಭಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಎಐಸಿಟಿಇ ನಿಯಮಗಳ ಪ್ರಕಾರ ಈಗಾಗಲೇ ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಸೌಕರ್ಯವನ್ನು ಒದಗಿಸಲು ಒತ್ತು ನೀಡಲಾಗುತ್ತಿದೆ. ಈ ಎಂಜಿನಿಯರಿಂಗ್ ಕಾಲೇಜುಗಳನ್ನು ಬಲವರ್ಧನೆಗೊಳಿಸುವ ಉದ್ದೇಶ ಹೊಂದಲಾಗಿದೆ. ಸಿಂಧಗಿ ಕ್ಷೇತ್ರದ ವ್ಯಾಪ್ತಿಯಲ್ಲಿ ಸರಕಾರಿ ಎಂಜಿನಿಯರಿಂಗ್ ಕಾಲೇಜು ಮಂಜೂರು ಮಾಡುವ ಉದ್ದೇಶವಿರುವುದಿಲ್ಲ ಎಂದು ಹೇಳಿದರು.