ಕಾರಿಡಾರ್ ಯೋಜನೆ ಪೂರ್ಣಗೊಳಿಸಲು ಸೂಚನೆ
Team Udayavani, May 23, 2020, 4:44 AM IST
ಬೆಂಗಳೂರು: ರಾಜಧಾನಿ ಬೆಂಗಳೂರಿನ ವಾಹನ ದಟ್ಟಣೆ ನಿವಾರಣೆಗಾಗಿ ಕೆಆರ್ಡಿಸಿಎಲ್ ವತಿಯಿಂದ ನಗರದ ಹೊರವಲಯದಲ್ಲಿ ಕೈಗೆತ್ತಿಕೊಂಡಿರುವ ವಿಮಾನ ನಿಲ್ದಾಣ ಕಾರಿಡಾರ್ ಯೋಜನೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಲೋಕೋಪಯೋಗಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ.
ಈ ಯೋಜನೆಯಡಿ 130 ಕೋಟಿ ರೂ. ವೆಚ್ಚದಲ್ಲಿ 20 ಕಿ.ಮೀ. ವ್ಯಾಪ್ತಿಯ ಬನ್ನೇರುಘಟ್ಟ-ಜಿಗಣಿ ಮಾರ್ಗವಾಗಿ ಆನೇಕಲ್ವರೆಗೆ ನಿರ್ಮಿಸುತ್ತಿರುವ ಚತುಷ್ಪತ ರಸ್ತೆ ನಿರ್ಮಾಣ ಕಾಮಗಾರಿ ಯನ್ನು ಶುಕ್ರವಾರ ಪರಿಶೀಲಿಸಿ ಮಾತನಾಡಿದರು. ವಿಮಾನ ನಿಲ್ದಾಣ ಕಾರಿಡಾರ್ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳ್ಳಬೇಕಿದೆ. ರೈಲ್ವೆ, ಅರಣ್ಯ ಇಲಾಖೆ, ಬೆಸ್ಕಾಂ ಜತೆ ಸಮನ್ವಯತೆ ಸಾಧಿಸಿ ಅಗತ್ಯ ಅನುಮತಿ ಪಡೆದುಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಳಿಕ, ಸುದ್ದಿಗಾರರ ಜತೆ ಮಾತನಾಡಿ, ನಗರದಲ್ಲಿ ಸುಗಮ ಸಂಚಾರಕ್ಕಾಗಿ 2095 ಕೋಟಿ ರೂ. ಮೊತ್ತದ 155 ಕಿ.ಮೀ. ಉದ್ದದ ವಿಮಾನ ನಿಲ್ದಾಣ ಕಾರಿಡಾರ್ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಶೀಘ್ರ ಕಾಮಗಾರಿ ಮುಗಿಸಲು ಕೆಆರ್ ಡಿಸಿಎಲ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು, ಗುತ್ತಿಗೆದಾರರಿಗೆ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇ ಶನ ಪಾಲಿಸಲು ಸೂಚನೆ ನೀಡಲಾಗಿ ದೆ. ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ 12 ಕೋಟಿ ರೂ. ವೆಚ್ಚದಲ್ಲಿ ಎಸ್ಕೆಎಫ್ ಕಾರ್ಖಾನೆಯಿಂದ ದೊಡ್ಡ ತೋಗೂರು ಮಾರ್ಗದ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದರು.