ಪ್ರತಿಪಕ್ಷ ನಾಯಕರ ಫೋನ್ ಟ್ಯಾಪಿಂಗ್: ಜೆಡಿಎಸ್ ಆರೋಪ
Team Udayavani, Aug 29, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿ ಈಗಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತಿಪಕ್ಷ ನಾಯಕರ ದೂರವಾಣಿ ಕದ್ದಾಲಿಕೆ ಮಾಡುತ್ತಿವೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ರಮೇಶ್ಬಾಬು ಆರೋಪಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಕೆಪಿಸಿಸಿ ಆಧ್ಯಕ್ಷ ದಿನೇಶ್ಗುಂಡೂರಾವ್ ಸಹಿತ ಪ್ರತಿಪಕ್ಷ ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ. ಖುದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆವರ ದೂರವಾಣಿ ಸಹ ಕದ್ದಾಲಿಕೆಯಾಗುತ್ತಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ. 23 ರಂದು ನನಗೆ ವಿದ್ಯುನ್ಮಾನ ಮಾಧ್ಯಮದ ಹೆಸರಿನಲ್ಲಿ ಒಬ್ಬರು ಕರೆ ಮಾಡಿ ಮಾತನಾಡಿ ಸಿದ್ದರಾಮಯ್ಯ ಅವರ ಪತ್ರಿಕಾಗೋಷ್ಠಿಗೆ ಪ್ರತಿಕ್ರಿಯೆ ಕೇಳಿದರು. ಆದರೆ, ನಾನು ನಿರಾಕರಿಸಿದೆ. ಬಳಿಕ ಪರಿಶೀಲಿಸಲಾಗಿ ಅದು ಮಾಧ್ಯಮದವರ ಹೆಸರಿನಲ್ಲಿ ಬೇನಾಮಿ ವ್ಯಕ್ತಿಗಳು ಕರೆ ಮಾಡಿರುವುದು ಪತ್ತೆಯಾಗಿದೆ. ಹೀಗಾಗಿ, ನನ್ನ ದೂರವಾಣಿ ಕದ್ದಾಲಿಕೆ ಮಾಡಿರುವ ಅನುಮಾನವಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ ಎಂದರು.