ಪುನುಗು ಬೆಕ್ಕು ಸಾಗಾಟ; ಇಬ್ಬರ ಬಂಧನ
Team Udayavani, Feb 13, 2020, 3:00 AM IST
ಸಿದ್ದಾಪುರ (ಉಡುಪಿ): ಹಿಲಿಯಾಣ ಗ್ರಾಮದ ಹೈಕಾಡಿ ಬಳಿ ಅಳಿವಿನಂಚಿನಲ್ಲಿರುವ ಅಪರೂಪದ ಪುನುಗು ಬೆಕ್ಕನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸ್ ಅರಣ್ಯ ಸಂಚಾರ ದಳ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದೆ. ಅವರಿಂದ ಜೀವಂತ ಬೆಕ್ಕು ಸಹಿತ ಇತರ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ತಂಡದ ಕೆಲವರು ಪರಾರಿಯಾಗಿದ್ದು, ಅವರಿಗಾಗಿ ಶೋಧ ನಡೆಸಲಾಗುತ್ತಿದೆ. ಕುಂದಾಪುರದ ಅಸರ್ ಅಲಿ (22) ಹಾಗೂ ಬಿದ್ಕಲ್ಕಟ್ಟೆ ನಿವಾಸಿ ಶರತ್ (23) ಬಂಧಿತರು.
ಅವರಿಂದ ಜೀವಂತ ಪುನುಗು ಬೆಕ್ಕು, ಪಂಜರ, ಮಾರುತಿ ಇಕೋ ಕಾರು ಹಾಗೂ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಅರಣ್ಯ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಅವರನ್ನು ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳು ಹಾಗೂ ಸೊತ್ತುಗಳನ್ನು ಶಂಕರನಾರಾಯಣ ವಲಯ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸುವಂತೆ ಸೂಚಿಸಿದೆ ಎಂದು ಶಂಕರನಾರಾಯಣ ವಲಯಾರಣ್ಯಾಧಿಕಾರಿ ಚಿದಾನಂದ ತಿಳಿಸಿದ್ದಾರೆ.