“ಪ್ರಾಥಮಿಕ ಶಿಕ್ಷಣದಲ್ಲಿಯೇ ಗುಣಮಟ್ಟ ಇರಬೇಕು’
Team Udayavani, Jul 22, 2019, 3:00 AM IST
ಬೆಂಗಳೂರು: ಪ್ರಾಥಮಿಕ ಶಿಕ್ಷಣ ಗುಣಮಟ್ಟದಿಂದ ಕೂಡಿದರೆ ಮಾತ್ರ ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸಾಧ್ಯ ಎಂದು ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಸೋಮಶೇಖರ್ ಅಭಿಪ್ರಾಯ ವ್ಯಕ್ತಪಡಿಸಿದರು. ರಾಜ್ಯ ವಿಶ್ವವಿದ್ಯಾಲಯಗಳ ವಿಶ್ರಾಂತ ಕುಲಪತಿಗಳ ವೇದಿಕೆಯಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಾಥಮಿಕ ಶಿಕ್ಷಣ ಹೆಚ್ಚು ಪ್ರಮಾಣ ಬೀರುವುದರಿಂದ ಪ್ರಾಥಮಿಕ ಹಂತದ ಶಿಕ್ಷಣವನ್ನು ಗಟ್ಟಿಗೊಳಿಸಬೇಕು.
ಮಕ್ಕಳ ಭವಿಷ್ಯದ ಮೇಲೆ ಪ್ರಭಾವ ಬೀರುವ ಮೌಲ್ಯಗಳನ್ನು ಪ್ರಾಥಮಿಕ ಹಂತದ ಶಿಕ್ಷಕರು ಹೊಂದಿರಬೇಕು. ಅಂದರೆ ಮಕ್ಕಳ ಬೌದ್ಧಿಕ ವಿಕಸನಗೊಳ್ಳಲು ಸಾಧ್ಯ ಎಂದರು. ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳಿಂದ ಬರುವ ಮಕ್ಕಳಿಗೆ ಈ ರೀತಿಯ ಶಿಕ್ಷಣ ನೀಡಿದರೆ ಶೈಕ್ಷಣಿಕ ಅಭಿವೃದ್ಧಿಯಾಗಬಹುದು. ದೇಶದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಶಿಕ್ಷಣದಲ್ಲಿ ಪ್ರಗತಿ ಸಾಧಿಸಿದರೆ ಆರ್ಥಿಕ, ಸಾಮಾಜಿಕ ಪರಿವರ್ತನೆಯಾಗಲಿದೆ.
ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯವಾಗಿದ್ದು, ದೇಶದ ಪ್ರತಿಯೊಂದು ಶಿಕ್ಷಣ ಸಂಸ್ಥೆಯಲ್ಲಿ ಉತ್ಕೃಷ್ಟವಾದ ಹಾಗೂ ಆಧುನಿಕ ಕೌಶಲ್ಯಾಧರಿತ ಶಿಕ್ಷಣ ಸಿಗಬೇಕು ಎಂದು ಹೇಳಿದರು. ಶಿಕ್ಷಣ ತಜ್ಞ ಪ್ರೊ.ಓ.ಅನಂತರಾಮಯ್ಯ ಮಾತನಾಡಿ, ನೂತನ ಶಿಕ್ಷಣ ನೀತಿಯಲ್ಲಿ ಸಾಮಾಜಿಕ ನ್ಯಾಯ ಎತ್ತಿ ಹಿಡಿಯುವ ಮೂಲಕ ಎಲ್ಲ ಹಂತಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಓಬಿಸಿ ವರ್ಗದವರಿಗೆ ಪ್ರವೇಶಾತಿ ಸಿಗಬೇಕು ಎಂದರು.