ರಾಜ್ಯಸಭಾ ಅಭ್ಯರ್ಥಿ ಆಯ್ಕೆ ಕಸರತ್ತು ಶುರು; ನಾಲ್ಕನೇ ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ಬಲ ಅಗತ್ಯ
Team Udayavani, May 26, 2022, 11:32 AM IST
ಬೆಂಗಳೂರು: ಮೂರೂ ರಾಜಕೀಯ ಪಕ್ಷಗಳಲ್ಲಿ ರಾಜ್ಯಸಭಾ ಅಭ್ಯರ್ಥಿಗಳ ಆಯ್ಕೆಯ ಕಸರತ್ತು ಶುರುವಾಗಿದೆ. ನಾಲ್ಕನೇ ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ಯಾರ ಕಡೆ ಒಲವು ತೋರುತ್ತದೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
ಬಿಜೆಪಿ ಹಾಗೂ ಕಾಂಗ್ರೆಸ್ನಲ್ಲಿ ಈಗಾಗಲೇ ರಾಜ್ಯ ಕಮಿಟಿಗಳಿಂದ ಹೈಕಮಾಂಡ್ಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ರವಾನೆ ಮಾಡಲಾಗಿದೆ. ಬಿಜೆಪಿಯಲ್ಲಿ ವಿಧಾನಸಭೆಯಲ್ಲಿ ಪಕ್ಷದ ಶಾಸಕರ ಸಂಖ್ಯಾ ಬಲದ ಆಧಾರದಲ್ಲಿ ಎರಡು ಸ್ಥಾನಗಳು ದೊರೆಯಲಿದ್ದು, ಮೂರನೇ ಅಭ್ಯರ್ಥಿಗೆ ಮತಗಳ ಕೊರತೆಯಾಗಲಿದೆ.
ಈಗಾಗಲೇ ರಾಜ್ಯ ಬಿಜೆಪಿ ಕೋರ್ ಕಮಿಟಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರನ್ನು ಶಿಫಾರಸು ಮಾಡಿದ್ದು, ಎರಡನೇ ಸ್ಥಾನಕ್ಕಾಗಿ ವಿಧಾನ ಪರಿಷತ್ ಸದಸ್ಯ ಲೆಹರ್ಸಿಂಗ್, ಕೆ.ಸಿ. ರಾಮಮೂರ್ತಿ, ಉದ್ಯಮಿ ಪ್ರಕಾಶ್ ಶೆಟ್ಟಿ ಅವರ ಹೆಸರು ಶಿಫಾರಸು ಮಾಡಿದ್ದು, ಶೀಘ್ರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಪಕ್ಷದ ವತಿಯಿಂದ ಎರಡನೇ ಅಭ್ಯರ್ಥಿಯಾ ಗಲು ಅವಕಾಶ ವಂಚಿತರಾಗುವ ಸಂಭಾವ್ಯ ಆಕಾಂಕ್ಷಿಗಳು ಬಿಜೆಪಿಯಲ್ಲಿ ಉಳಿಯುವ ಮತಗ ಳನ್ನು ಪಡೆದು ಬೇರೆ ಪಕ್ಷಗಳಿಂದ ಮತ ಪಡೆ ಯುವ ಬಗ್ಗೆ ಜೆಡಿಎಸ್ ಜೊತೆ ಮಾತುಕತೆ ನಡೆಸಲು ಸಿದ್ಧರಿರುವಂತೆ ಬಿಜೆಪಿ ನಾಯಕರು ಆಕಾಂಕ್ಷಿಗಳಿಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:ಕುಷ್ಟಗಿ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಕಾಂಗ್ರೆಸ್ ನಲ್ಲಿ ಇರ್ತಾರ? ಜೆಡಿಎಸ್ ಸೇರ್ತಾರ!
ಈಗಿರುವ ಮಾಹಿತಿ ಪ್ರಕಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯದ ಬದಲು ಉತ್ತರ ಪ್ರದೇಶದಿಂದ ರಾಜ್ಯ ಸಭೆಗೆ ಕಳುಹಿಸಲು ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ. ಒಂದು ವೇಳೆ ಅವರಿಗೆ ರಾಜ್ಯದಿಂದ ಟಿಕೆಟ್ ನೀಡದಿದ್ದರೆ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ, ತೇಜಸ್ವಿನಿ ಅನಂತಕುಮಾರ್ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಕಾಂಗ್ರೆಸ್ನಲ್ಲಿ ಒಂದು ಸ್ಥಾನ ದೊರೆಯಲಿದ್ದು, ಹಾಲಿ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಅವರಿಗೆ ನೀಡುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಒಲವು ತೋರಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜೆಡಿಎಸ್ನಲ್ಲಿ ಸ್ವಂತ ಶಕ್ತಿಯಿಂದ ರಾಜ್ಯಸಭೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಶಕ್ತಿ ಇಲ್ಲದಿದ್ದರೂ, ಬಿಜೆಪಿ ಅಥವಾ ಕಾಂಗ್ರೆಸ್ ಮತಗಳನ್ನು ಪಡೆದು ಕೊಳ್ಳುವ ಸಾಮರ್ಥ್ಯ ಇರುವ ವ್ಯಕ್ತಿಗೆ ಬೆಂಬಲ ಸೂಚಿಸುವ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯಸಭಾ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಅವರು ಮತ್ತೆ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರ ಬೆಂಬಲದೊಂದಿಗೆ ರಾಜ್ಯಸಭೆಗೆ ಆಯ್ಕೆಯಾಗುವ ಕಸರತ್ತು ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಜೆಪಿಯಿಂದ ಆಯ್ಕೆ ಬಯಸಿರುವ ಕೆಲವರು ಜೆಡಿಎಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆನ್ನಲಾಗಿದ್ದು, ಜೆಡಿಎಸ್ ನಾಯಕರು ಯಾರ ಕಡೆ ಒಲವು ತೋರುತ್ತಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.