ಆಶಾ ಕಾರ್ಯಕರ್ತೆಯರ ಬಾಕಿ ಇರುವ ಗೌರವಧನ ಬಿಡುಗಡೆ ಮಾಡಿ: ಕುಮಾರಸ್ವಾಮಿ ಆಗ್ರಹ
Team Udayavani, May 23, 2021, 5:18 PM IST
ಬೆಂಗಳೂರು: ಕೋವಿಡ್ ನಿರ್ವಹಣೆಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ರಾಜ್ಯ ಸರ್ಕಾರ ಬಾಕಿ ಇರುವ ಗೌರವಧನವನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೂರು ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನವಿಲ್ಲ. ಸಂಬಳವನ್ನೇ ನಂಬಿರುವ ಅವರ ಬದುಕು ದುಸ್ತರವಾಗಿದೆ. ಕೋವಿಡ್ ಮೊದಲ ಅಲೆಯಲ್ಲಿ ಜೀವಪಣಕ್ಕಿಟ್ಟು ದುಡಿದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನದ ಜೊತೆಗೆ ತಲಾ 3 ಸಾವಿರ ರೂ. ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದ್ದ ಸರ್ಕಾರ ಶೇಕಡಾ 50ರಷ್ಟು ಮಂದಿಗೆ ಕೊಟ್ಟು ಉಳಿದವರಿಗೆ ವಂಚಿಸಿದೆ ಎಂದರು.
ಕೋವಿಡ್ 19 ನಿಯಂತ್ರಣಕ್ಕಾಗಿ ಶ್ರಮಿಸಿದ 16 ಮಂದಿ ಆಶಾ ಕಾರ್ಯಕರ್ತೆಯರು ಈ ವರೆಗೆ ಸಾವನ್ನಪ್ಪಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಕೊರೋನಾ ವೈರಸ್ ಸೋಂಕಿತರಾಗಿದ್ದಾರೆ. ಮಾಸಿಕ ಗೌರವಧನ ಕೊಡುವಲ್ಲಿ ಸೋತಿರುವ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದರು.
ಇದನ್ನೂ ಓದಿ:ಅಪ್ಪನ ಹೆಣ ಬೇಡ, ಅವರ ಬಳಿಯಿರುವ ಹಣ ಕೊಡಿ.! ; ಮೈಸೂರಿನಲ್ಲೊಬ್ಬ ಪಾಪಿ ಮಗ
ಕೋವಿಡ್ ವಾರಿಯರ್ಸ್ ಎಂದು ಬಾಯಿಮಾತಿನಲ್ಲಿ ಹೇಳಿದ ಸರ್ಕಾರ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಸಕಾಲಕ್ಕೆ ಗೌರವಧನ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ದುಡಿದವರಿಗೆ ಗೌರವಧನ ಕೊಡಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ 1250 ಕೋಟಿ ರೂಗಳ ಪ್ಯಾಕೇಜನ್ನು ಅನುಷ್ಠಾನಗೊಳಿಸುತ್ತದೆ ಎಂಬುದು ಭ್ರಮೆ ಅಲ್ಲದೆ ಮತ್ತೇನು? ಕೊರೋನಾ ವಾರಿಯರ್ಸ್ ಎಂದು ಹಣೆಪಟ್ಟಿ ಹಚ್ಚಿದ ಸರ್ಕಾರ ಒಬ್ಬ ಆಶಾ ಕಾರ್ಯಕರ್ತೆಗೆ ಮಾತ್ರ 50 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಉಳಿದ 15 ಮಂದಿಗೆ ಪರಿಹಾರ ಕೊಟ್ಟಿಲ್ಲ. ಸರ್ಕಾರದ ಇಂತಹ ಬೇಜವಾಬ್ದಾರಿಗಳಿಂದ ಬೇಸತ್ತು ಆಶಾ ಕಾರ್ಯಕರ್ತೆಯರು ದೂರ ಉಳಿದರೆ ಕೋವಿಡ್ 19 ನಿಯಂತ್ರಣ ಕೈ ಮೀರುತ್ತದೆ. ಸರ್ಕಾರಕ್ಕೆ ಇದು ಎಚ್ಚರಿಕೆಯ ಗಂಟೆ ಕೂಡ ಎಂದು ಕುಮಾರಸ್ವಾಮಿ ಎಚ್ಚರಿಸಿದರು.