ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ಆಗಸ್ಟ್ 15ರವರೆಗೂ ಸೆಕ್ಷನ್ 144 ಜಾರಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 146 ಗಲಭೆಕೋರರನ್ನು ಬಂಧಿಸಲಾಗಿದೆ
Team Udayavani, Aug 13, 2020, 8:35 AM IST
ಬೆಂಗಳೂರು:ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ಗಲಭೆ ನಡೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಆಗಸ್ಟ್ 15ರ ಬೆಳಗ್ಗೆ 6ಗಂಟೆವರೆಗೆ ಮುಂದುವರಿಯಲಿದೆ ಎಂದು ಪೊಲೀಸ್ ಕಮಿಷನರ್ ಕಮಲ್ ಪಂಥ್ ತಿಳಿಸಿದ್ದಾರೆ.
ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದರಿಂದ ನಾಲ್ಕು ಅಥವಾ ಅದಕ್ಕಿಂತ ಹೆಚ್ಚಿನ ಜನರು ಗುಂಪುಗೂಡುವುದಕ್ಕೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.
ಗಲಭೆ ಪ್ರಕರಣದಲ್ಲಿ ಗೋಲಿಬಾರ್ ನಿಂದಾಗಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದ್ದು, ಇಡೀ ಪ್ರಕರಣವನ್ನು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಎ ಆದೇಶಿಸಿದೆ.
ರಾಷ್ಟ್ರೀಯ ಮಾನವ ಹಕ್ಕು ಆಯೋಗದ ನಿಯಮಾವಳಿ ಪ್ರಕಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲು ತೀರ್ಮಾನಿಸಿದ್ದರು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 146 ಗಲಭೆಕೋರರನ್ನು ಬಂಧಿಸಲಾಗಿದೆ ಎಂದು ಗೃಹಸಚಿವ ಬೊಮ್ಮಾಯಿ ಎಎನ್ ಐಗೆ ತಿಳಿಸಿದ್ದಾರೆ.
ಬೆಂಗಳೂರು ಪುಲಕೇಶಿ ನಗರದಲ್ಲಿ ಮಂಗಳವಾರ ರಾತ್ರಿ ಏಕಾಏಕಿ ಒಂದು ಸಮುದಾಯದ ಗುಂಪು ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿದ್ದರು. ಅಖಂಡ ಅವರ ಸಹೋದರ ಸಂಬಂಧಿ ಎನ್ನಲಾದ ನವೀನ್ ಎಂಬ ಯುವಕ ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದು ಗಲಭೆ ನಡೆಯಲು ಕಾರಣವಾಗಿತ್ತು ಎಂದು ವರದಿ ತಿಳಿಸಿದೆ.