ಮಂತ್ರಿಗಿರಿಗಾಗಿ ಪ್ರತ್ಯೇಕ ಜಿಲ್ಲೆ ಬೇಡಿಕೆ ಕೈಬಿಡಲ್ಲ
Team Udayavani, Jan 28, 2020, 3:04 AM IST
ಹೊಸಪೇಟೆ: ಸಚಿವ ಸ್ಥಾನಕ್ಕೆ ಕಟ್ಟುಬಿದ್ದು ವಿಜಯನಗರ ಜಿಲ್ಲೆ ರಚನೆ ಬೇಡಿಕೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಶಾಸಕ ಆನಂದ ಸಿಂಗ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸ್ಥಾನದ ಆಕಾಂಕ್ಷಿ ನಾನಲ್ಲ. ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಯೇ ನನ್ನ ಮೊದಲ ಆದ್ಯತೆ. ಸಚಿವ ಸ್ಥಾನ ಸಿಗಲಿದೆ ಎಂಬ ಕಾರಣಕ್ಕೆ ಹೊಸ ಜಿಲ್ಲೆ ಬೇಡಿ ಕೆಯಿಂದ ಹಿಂದೆ ಸರಿಯುವುದಿಲ್ಲ.
ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ಮಾಡುವ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡಲಾಗುವುದು ಎಂದರು. ಬಿಜೆಪಿ ಸರಕಾರದಲ್ಲಿ ಹೊಸ ಜಿಲ್ಲೆ ಘೋಷಣೆ ಆಗಲಿದೆ. ಇದರಲ್ಲಿ ಯಾವ ಸಂದೇಹವಿಲ್ಲ. ಹೊಸ ಜಿಲ್ಲೆ ರಚನೆಯಾಗಲಿದೆ ಎಂಬ ನಂಬಿಕೆ ಇದೆ ಎಂದರು. ಸಿಎಂ ಯಡಿಯೂರಪ್ಪ ಅವರು ಎಲ್ಲರಿಗೂ ನ್ಯಾಯ ಒದಗಿಸಲಿದ್ದಾರೆಂಬ ವಿಶ್ವಾಸವಿದೆ ಎಂದರು.
“ಸೋತವರನ್ನು ಮಂತ್ರಿ ಮಾಡಿದ್ರೆ ಜನ ತಪ್ಪಾಗಿ ಮಾತಾಡ್ತಾರೆ’
ಹಾವೇರಿ: ಬಿಜೆಪಿ ಸರ್ಕಾರ ಬೆಂಬಲಿಸಿ, ಉಪ ಚುನಾವಣೆಯಲ್ಲಿ ಸೋತವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟು ತೃಪ್ತಿಪಡಿಸಬೇಕು. ಅವರಿಗೆ ಸಚಿವ ಸ್ಥಾನ ಕೊಟ್ಟರೆ ಜನರು ತಪ್ಪಾಗಿ ಮಾತನಾಡಿಕೊಳ್ಳುತ್ತಾರೆ ಎಂದು ಶಾಸಕ ನೆಹರು ಓಲೇಕಾರ ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ಜ.29ರಂದು ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂದು ಸಿಎಂ ಯಡಿಯೂರಪ್ಪನವರೇ ಹೇಳಿದ್ದಾರೆ. ಹಿರಿಯರಿಗೆ ಪಕ್ಷ ಸಂಘಟನೆಯ ಜವಾಬ್ದಾರಿ ಕೊಡುವ ಬಗ್ಗೆ ಪಕ್ಷದ ನಾಯಕರು ಚರ್ಚಿಸಿದ್ದಾರೆ. ಹಿರಿಯರನ್ನು ಕೈಬಿಟ್ಟು ಹೊಸಬರಿಗೆ ಸಚಿವ ಸ್ಥಾನ ಕೊಡುವ ವಿಚಾರವಿದೆ ಎಂದರು. ನಾನೂ ಹಿರಿಯ ಶಾಸಕನಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ.
ಸಚಿವ ಸಂಪುಟದಲ್ಲಿ ಎಲ್ಲಾ ಸಮುದಾಯದವರು ಇದ್ದರೆ ಅದಕ್ಕೊಂದು ಗೌರವ ಇರುತ್ತದೆ. ಸಚಿವ ಸ್ಥಾನಕ್ಕೆ ಮಠಾಧೀಶರು ಸೇರಿ ಎಲ್ಲರೂ ಸಿಎಂ ಮೇಲೆ ಒತ್ತಡ ಹಾಕುತ್ತಿರುವುದರಿಂದ ಸಮಸ್ಯೆ ಉಲ್ಬಣಿಸಿದೆ. ಹದಿನೇಳು ಜನರ ತ್ಯಾಗದಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಅವರಿಂದಲೇ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಅವರಿಗೆ ಸಚಿವ ಸ್ಥಾನ ಕೊಡಲು ತಕರಾರಿಲ್ಲ ಎಂದು ಹೇಳಿದರು.