ಪ್ರತ್ಯೇಕ ರಾಜ್ಯ ಧ್ವಜಾರೋಹಣ ಯತ್ನ, ಬಂಧನ
Team Udayavani, Jan 2, 2020, 3:05 AM IST
ಹಿರೇಬಾಗೇವಾಡಿ: ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ಬಳಿಕ ಬಿಡುಗಡೆ ಮಾಡಿದ್ದಾರೆ.
ಬುಧವಾರ ಉತ್ತರ ಕರ್ನಾಟಕ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಅಡಿವೇಶ ಇಟಗಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕರ್ನಾಟಕ ರಾಜ್ಯದಲ್ಲಿ ಅಸಮತೋಲನ ಆಗುತ್ತಿದ್ದು, ಉತ್ತರ ಭಾಗಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಹೀಗಾಗಿ, ನಮ್ಮ ಉತ್ತರ ಕರ್ನಾಟಕ ರಾಜ್ಯ ನಮಗೆ ಬೇಕು ಎಂದು ಘೋಷಣೆ ಕೂಗಿದರು.
ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆಗೆ ಒತ್ತಾಯಿಸಿದ ಹೋರಾಟಗಾರರು, ಪ್ರತ್ಯೇಕ ಉತ್ತರ ಕರ್ನಾಟಕ ಧ್ವಜಾರೋಹಣ ಮಾಡಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಹೋರಾಟಗಾರರು ಮತ್ತು ಧ್ವಜವನ್ನು ಪೊಲೀಸರು ವಶಕ್ಕೆ ಪಡೆದರು.
ಈ ವೇಳೆ ಮಾತನಾಡಿದ ಅಡಿವೇಶ ಇಟಗಿ, ಮೊದಲಿನಿಂದಲೂ ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಆಗುತ್ತಿದೆ. ಇಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಕೇವಲ ಬೆಂಗಳೂರನ್ನು ಕೇಂದ್ರವಾಗಿರಿಸಿಕೊಂಡು ದಕ್ಷಿಣ ಕರ್ನಾಟಕವನ್ನೇ ಅಭಿವೃದ್ಧಿ ಮಾಡಲು ಹೊರಟಿರುವ ಜನಪ್ರತಿನಿಧಿ ಗಳು ನಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ. ಈ ಭಾಗದ ಜನಪ್ರತಿನಿ ಧಿಗಳೂ ಅಭಿವೃದ್ಧಿ ಬಗ್ಗೆ ಚಿಂತಿಸದೆ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.