ಸಿದ್ದರಾಮಯ್ಯಗೆ ಟೀಕಿಸುವ ನೈತಿಕತೆ ಇಲ್ಲ: ಶ್ರೀರಾಮುಲು
Team Udayavani, Aug 19, 2019, 3:04 AM IST
ಬಳ್ಳಾರಿ: ಪ್ರವಾಹದಿಂದ ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಹಾನಿಯಾಗಿದ್ದರೂ ಅಲ್ಲಿಗೆ ಭೇಟಿ ನೀಡದೆ ಜನರ ಸಂಕಷ್ಟಕ್ಕೆ ಸ್ಪಂದಿಸದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರ ಬಗ್ಗೆ ಮಾತನಾಡಲು ನೈತಿಕತೆಯಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಬಿ. ಶ್ರೀರಾಮುಲು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಹಾವಳಿಯಿಂದ ಉತ್ತರ ಕರ್ನಾಟಕದಲ್ಲಿ ಜನ ತತ್ತರಿಸಿದ್ದಾರೆ. ಆದರೂ, ರಾಜಕೀಯವಾಗಿ ಮರುಜನ್ಮ ನೀಡಿದ್ದ ಬಾದಾಮಿ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಒಮ್ಮೆಯೂ ಭೇಟಿ ನೀಡಿಲ್ಲ. ಬದಲಿಗೆ ಪ್ರಧಾನಿ, ಹಾಗೂ ಮುಖ್ಯಮಂತ್ರಿಯನ್ನು ಟೀಕಿಸುತ್ತಿದ್ದಾರೆ ಎಂದು ದೂರಿದರು.
ಕಣ್ಣಿನ ಆಪರೇಷನ್ ನೆಪದಲ್ಲಿ ಬಾದಾಮಿ ಕ್ಷೇತ್ರಕ್ಕೆ ಹೋಗಿಲ್ಲ ಎಂದು ಹೇಳುವ ಸಿದ್ದರಾಮಯ್ಯನವರು ದೆಹಲಿಗೆ ಹೋಗಿದ್ದಾರೆ. ಜನ ಸಂಕಷ್ಟದಲ್ಲಿದ್ದರೂ ಸ್ನೇಹಿತರ ಮನೆಗೆ ಹೋಗಿ ಬಿರಿಯಾನಿ ತಿಂದಿದ್ದಾರೆ. ಆಗ ಆರೋಗ್ಯದ ಸಮಸ್ಯೆಯಾಗಲ್ಲ. ತಮ್ಮಲ್ಲೇ ತಪ್ಪು ಇಟ್ಟುಕೊಂಡು ಮುಖ್ಯಮಂತ್ರಿ ಹಾಗೂ ಪ್ರಧಾನಿಯವರನ್ನು ಟೀಕಿಸಲು ಇವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಕಿಡಿಕಾರಿದರು.