ಡಬ್ಬಲ್ ದ್ರೋಹ ರಾಜ್ಯಪಾಲರಿಂದ ಸುಳ್ಳು ಹೇಳಿಸಿದ ಸರ್ಕಾರ: ಸಿದ್ದರಾಮಯ್ಯ ಆರೋಪ
Team Udayavani, Feb 15, 2022, 6:35 AM IST
ಬೆಂಗಳೂರು: ಡಬ್ಬಲ್ ಎಂಜಿನ್ ಸರ್ಕಾರ ನಾಡಿಗೆ ಡಬ್ಬಲ್ ದ್ರೋಹ ಎಸಗಿದೆ. ಸರ್ಕಾರವು ರಾಜ್ಯಪಾಲರ ದಿಕ್ಕು ತಪ್ಪಿಸಿ ಅವರ ಬಾಯಿಂದ ಸುಳ್ಳು ಹೇಳಿಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಕೆಲವು ಯೋಜನೆಗಳನ್ನು ತನ್ನ ಯೋಜನೆಗಳು ಎಂದು ಬಿಂಬಿಸಿಕೊಂಡಿದೆ ಎಂದು ದೂರಿದರು.
ನಾಗರಿಕ ಸರ್ಕಾರಕ್ಕೆ ನಿರ್ಧಿಷ್ಟವಾದ ಗೊತ್ತು-ಗುರಿಗಳಿರುತ್ತವೆ. ಆದರೆ, ರಾಜ್ಯಪಾಲರ ಭಾಷಣ ಕೇಳಿದ ಮೇಲೆ, ಈ ಸರ್ಕಾರಕ್ಕೆ ಯಾವುದೇ ಗೊತ್ತು ಗುರಿಗಳಿಲ್ಲ ಎಂದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.
ಸಾಮಾನ್ಯವಾಗಿ ರಾಜ್ಯಪಾಲರ ಭಾಷಣ ಸರ್ಕಾರದ ಒಂದು ವರ್ಷದ ಸಾಧನೆ ಮತ್ತು ಮುಂದಿನ ವರ್ಷಕ್ಕೆ ಇರಬೇಕಾದ ಮುನ್ನೋಟದ ಗುರಿಗಳನ್ನು ಒಳಗೊಂಡಿರುತ್ತದೆ. ಈ ಸರ್ಕಾರ ಕಳೆದ ಒಂದು ವರ್ಷದಿಂದ ಏನನ್ನೂ ಮಾಡಿಲ್ಲ ಎಂಬುದಕ್ಕೆ ರಾಜ್ಯಪಾಲರ ಭಾಷಣವೇ ಸಾಕ್ಷಿ ಎಂದರು.
ರಾಜ್ಯಪಾಲರ ಭಾಷಣದಲ್ಲಿ 116 ಪ್ಯಾರಾಗಳಿದ್ದು ಅದರಲ್ಲಿ 23 ಪ್ಯಾರಾಗಳು ಕೋವಿಡ್ ಮತ್ತು ಪ್ರವಾಹಕ್ಕೆ ಸಂಬಂಧಪಟ್ಟಿವೆ. ಉಳಿದಂತೆ ಸುಮಾರು 30 ಪ್ಯಾರಾಗಳು ಹಳೆಯವು ಮತ್ತು ಭರವಸೆಗಳಾಗಿವೆ. ಅದರಲ್ಲಿ ನಮ್ಮ ಸರ್ಕಾರದ ಸಾಧನೆಗಳೂ ಇವೆ. ಕೆಲವಕ್ಕೆ ಹೆಸರು ಬದಲಾಯಿಸಲಾಗಿದೆ ಎಂದು ಹೇಳಿದರು.
ನಾನು ನನ್ನ ರಾಜಕೀಯ ಅನುಭವದ ಮೇಲೆ ಹೇಳುವುದಾದರೆ ಇಷ್ಟೊಂದು ಕೆಟ್ಟದಾದ ಭಾಷಣವನ್ನು ಎಂದೂ ಕೇಳಿರಲಿಲ್ಲ. ಏನನ್ನೂ ಮಾಡದ ಸರ್ಕಾರವನ್ನು ಆರಿಸಿ ಕಳುಹಿಸಿದ್ದು ಈ ನಾಡಿನ ದೌರ್ಭಾಗ್ಯ ಎಂಬುದು ರಾಜ್ಯಪಾಲರ ಭಾಷಣದಿಂದ ರಾಜ್ಯದ ಜನರಿಗೆ ಇಂದು ಅರ್ಥವಾಗಿದೆ ಎಂದು ಹೇಳಿದರು.