ಯಡಿಯೂರಪ್ಪ ರಾಜೀನಾಮೆ ಕೊಡದಿದ್ದರೆ ಕಾಂಗ್ರೆಸ್ ಬೀದಿಗಿಳಿದು ಹೋರಾಟ: ಸಿದ್ದರಾಮಯ್ಯ
Team Udayavani, Dec 24, 2020, 1:59 PM IST
ಬೆಂಗಳೂರು: ಅಕ್ರಮ ಡಿನೋಟಿಫಿಕೇಶನ್ ಪ್ರಕರಣದ ರದ್ಧತಿಗೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ನಲ್ಲಿ ವಜಾಗೊಂಡ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.
ವಿಧಾನಸೌಧದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಕೊಡದಿದ್ದರೆ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಇದನ್ನೂ ಓದಿ:ಶಾಲಾಂಭದ ವಿಚಾರ ನಮಗೆ ಪ್ರತಿಷ್ಠೆಯ ವಿಚಾರವಲ್ಲ, ಸಮನ್ವಯದ ಕೊರತೆಯಿಲ್ಲ: ಸುರೇಶ್ ಕುಮಾರ್
ಬಿಎಸ್ ವೈ ಅವರು ರಾಜೀನಾಮೆ ಕೊಟ್ಟು ಸುಪ್ರೀಂ ಕೋರ್ಟ್ ಗೆ ಹೋಗಿ ಕ್ಲೀನ್ ಚಿಟ್ ಪಡೆದು ಮತ್ತೆ ಮುಖ್ಯಮಂತ್ರಿ ಆಗಲಿ. ಇಲ್ಲದಿದ್ದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ “ನಾ ಖಾವುಂಗ ನಾ ಖಾನೆ ದೂಂಗಾ” ಎನ್ನುವುದಕ್ಕೆ ಅರ್ಥ ಎಲ್ಲಿದೆ. ಬಿಎಸ್ ವೈ ರಾಜೀನಾಮೆ ಕೊಡದಿದ್ದರೆ ಮೋದಿಯವರೇ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.