ರಾಜ್ಯದಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ‘ಧಮ್’ ಇದೆಯಾ? ನಿರ್ಮಲಾ, ನಳಿನ್ ಗೆ ಸಿದ್ದರಾಮಯ್ಯ
Team Udayavani, Oct 23, 2020, 1:36 PM IST
ಬೆಂಗಳೂರು: ಕೋವಿಡ್-19 ಲಸಿಕೆಯನ್ನು ಬಿಹಾರದಲ್ಲಿ ಉಚಿತವಾಗಿ ನೀಡುತ್ತೇವೆ ಎಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮನವೊಲಿಸಿ ರಾಜ್ಯದಲ್ಲೂ ಉಚಿತ ಲಸಿಕೆ ಹಂಚುವಂತೆ ಮಾಡುವ ‘ಧಮ್ ನಿಮಗಿದೆಯೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಾಣ ರಕ್ಷಕ ಕೋವಿಡ್ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ ನಳಿನ್ ಕುಮಾರ್ ಕಟೀಲ್ ಅವರೇ ಎಂದು ಪ್ರಶ್ನಿಸಿದ್ದಾರೆ.
ನಳಿನ್ ಕುಮಾರ್ ಕಟೀಲ್ ಅವರೇ ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರ ಮನವೊಲಿಸಿ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಕೋವಿಡ್ ನಿಂದ ಭೀತಿಗೊಳಗಾಗಿರುವ ಜನರಿಗೆ ಕೋವಿಡ್ ಲಸಿಕೆಯನ್ನು ಉಚಿತವಾಗಿ ಕೊಡಿಸುವ ‘ಧಮ್’ (ಇದು ನಿಮ್ಮದೇ ಭಾಷೆ) ನಿಮಗಿದೆಯೇ ಎಂದು ಸಿದ್ದರಾಮಯ್ಯ ಟ್ವೀಟ್ ನಲ್ಲಿ ಕುಟುಕಿದ್ದಾರೆ.
ಗುರುವಾರ ನಳಿನ್ ಕುಮಾರ್ ಕಟೀಲ್ ರನ್ನು ಕಾಡುಮನುಷ್ಯ ಎಂದು ಸಿದ್ದರಾಮಯ್ಯ ಕರೆದಿದ್ದರು. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ನಳಿನ್ ಕಟೀಲ್ ಉತ್ತರಿಸಿ, ನೀವು ಬಳಸುವ ಭಾಷೆಗಳಿಂದ ಯಾರು ಕಾಡು ಮನುಷ್ಯ ಎಂದು ತಿಳಿಯುತ್ತದೆ. ನೀವು ರಾಜ್ಯ ಕಾಂಗ್ರೆಸ್ ನ ವಿದೂಷಕ ಇದ್ದ ಹಾಗೆ ಎಂದು ಹೇಳಿದ್ದರು.
ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ @nsitharaman ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ @nalinkateel ಅವರೇ?
1/2— Siddaramaiah (@siddaramaiah) October 23, 2020