ಅಕ್ರಮ ವಿದೇಶಿಗರ ಮೇಲೆ ನಿಗಾ: ಆರಗ
Team Udayavani, Sep 7, 2021, 7:40 AM IST
ಬೆಂಗಳೂರು: ವೀಸಾ ಅವಧಿ ಮುಗಿದರೂ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ನಾಗರಿಕರನ್ನು ಗುರುತಿಸಿ ಅವರ ಚಟುವಟಿಕೆಗಳ ಮೇಲೆ ನಿಗಾ ಇರಿಸಬೇಕೆಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮ ವಲಸಿಗರು ದೇಶದ್ರೋಹಿ ಕೃತ್ಯ ಅಥವಾ ಸಮಾಜ ವಿರೋಧಿ ಕೃತ್ಯ ನಡೆಸದಂತೆ ನಿಗಾ ವಹಿಸಬೇಕು. ಅವರ ಬಗ್ಗೆ ಪ್ರತಿ ಠಾಣ ವ್ಯಾಪ್ತಿಯಲ್ಲಿ ಪ್ರತ್ಯೇಕ ದಾಖಲಾತಿ ನಿರ್ವಹಿಸಲು ನಿರ್ದೇಶಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ವಿವಿಧ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಸಮರ್ಥವಾಗಿ ಮಂಡಿಸಿ, ಶಿಕ್ಷೆ ಕೊಡಿಸುವ ಪ್ರಮಾಣ ಹೆಚ್ಚಿಸುವುದು ಹಾಗೂ ಅಪರಾಧ ಕೃತ್ಯಗಳ ನಿಯಂತ್ರಣ ಮೂಲಕ ಇಲಾಖೆ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ವಿಶ್ವಾಸ ಮೂಡಿಸಬೇಕಾಗಿದೆ ಎಂದು ಸೂಚಿಸಲಾಗಿದೆ ಎಂದರು.
ಗಸ್ತು ಹೆಚ್ಚಳ :
ಗ್ರಾಮೀಣ ಪ್ರದೇಶದಲ್ಲಿ ಪೊಲೀ ಸರ ಗಸ್ತು ಪದ್ಧತಿಯನ್ನು ಪರಿಷ್ಕರಿಸಿ ಅಪರಾಧ ಪ್ರಕರಣಗಳನ್ನು ಗಣ ನೀಯವಾಗಿ ತಗ್ಗಿಸಲು ಕ್ರಮ ತೆಗೆದು ಕೊಳ್ಳಬೇಕು ಎಂದು ತಿಳಿಸಲಾಗಿದೆ. ಪಟ್ಟಣ ಪ್ರದೇಶದಲ್ಲಿ ಇ -ಗಸ್ತು ವ್ಯವಸ್ಥೆಯನ್ನು ಬಲಪಡಿಸಲು ತೀರ್ಮಾನಿಸಲಾಗಿದೆ, ಎಂದರು.
ಎನ್ಐಎ ಘಟಕ :
ಬೆಂಗಳೂರು ಅಥವಾ ಮಂಗಳೂರಿನಲ್ಲಿ ಎನ್ಐಎ ಘಟಕ ಅಗತ್ಯದ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
“ರೌಡಿ ಶೀಟರ್’ ಪರಿಷ್ಕರಣೆ:
ಪ್ರತಿ ಪೊಲೀಸ್ ಠಾಣೆಯಲ್ಲಿರುವ “ರೌಡಿ ಶೀಟರ್’ ಪಟ್ಟಿಯನ್ನು ಕಾನೂನಿನ ಮಾನದಂಡ ಪ್ರಕಾರ ಪುನಃ ಪರಿಶೀಲಿಸಬೇಕು. ಕನ್ನಡಪರ, ರೈತಪರ ಹಾಗೂ ಇನ್ನಿತರ ಜನಪರ ಚಳವಳಿಯಲ್ಲಿ ಭಾಗವಹಿಸಿದವರ ವಿರುದ್ಧ ದಾಖಲಾದ “ರೌಡಿ ಶೀಟರ್’ ಪಟ್ಟಿಯನ್ನು ವೈಜ್ಞಾನಿಕವಾಗಿ ಪರಿಷ್ಕರಿಸಬೇಕು. ಅಮಾಯಕರ ಹೆಸರು ಪಟ್ಟಿಯಲ್ಲಿದ್ದರೆ ಅದನ್ನು ಪರಿಷ್ಕರಿಸುವ ನಿರ್ಧಾರವನ್ನು ಎಸ್ಪಿ ತೆಗೆದುಕೊಳ್ಳಬೇಕು ಎಂದರು.