ಕುಡಿಯುವ ನೀರು ಪೂರೈಕೆಗೆ ತಹಸೀಲ್ದಾರ್ಗಳಿಗೆ ಅಧಿಕಾರ
Team Udayavani, May 11, 2019, 3:00 AM IST
ಬೆಂಗಳೂರು: ಬರ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಿರುವ ಗ್ರಾಮಗಳಲ್ಲಿ ಯಾವುದೇ ವಿಳಂಬ ಇಲ್ಲದೆ ಟ್ಯಾಂಕರ್ ಮೂಲಕ ಸರಬರಾಜು ಮಾಡಲು ಸಂಪೂರ್ಣ ಅಧಿಕಾರ ತಹಸೀಲ್ದಾರ್ಗಳಿಗೆ ನೀಡಲಾಗಿದೆ.
ಮುಂಗಾರು ಹಂಗಾಮಿನಲ್ಲಿ 100 ತಾಲೂಕು, ಹಿಂಗಾರು ಹಂಗಾಮಿನಲ್ಲಿ 156 ತಾಲೂಕು ಬರಪೀಡಿತ ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿಯಿಂದ ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗಿದೆ ಎಂದು ಇತ್ತೀಚೆಗೆ ಮುಖ್ಯ ಕಾರ್ಯದರ್ಶಿಯಗಳು ನಡೆಸಿದ ವಿಡಿಯೋ ಕಾನ್ಫರೆನ್ಸ್ನಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ತಿಳಿಸಿದ್ದರು.
ಕುಡಿಯುವ ನೀರು ಟ್ಯಾಂಕರ್ ಮೂಲಕ ಸರಬರಾಜು ಮಾಡಲು ತುರ್ತಾಗಿ ಅನುಮೋದನೆ ನೀಡುವಂತೆ ಮನವಿ ಮಾಡಿದ್ದರು. ಆದರೆ, ಕೆಲವೆಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆಗೆ ಅನುಮತಿ ನೀಡಲು ತೊಂದರೆಯಾಗುತ್ತಿತ್ತು. ಹೀಗಾಗಿ, ಬರಪೀಡಿತ ತಾಲೂಕುಗಳ ತಹಸೀಲ್ದಾರ್ಗಳಿಗೆ ಸಂಪೂರ್ಣ ಅಧಿಕಾರ ನೀಡಲು ತೀರ್ಮಾನಿಸಲಾಗಿತ್ತು. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ.