ವಿದ್ಯಾಗಮ ಪುನರಾರಂಭಿಸಿ: ಶಿಕ್ಷಕರ ಆಗ್ರಹ
Team Udayavani, Nov 25, 2020, 1:44 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಶಾಲಾರಂಭಕ್ಕೆ ಸಂಬಂಧಿಸಿದಂತೆ ಡಿಸೆಂಬರ್ ಅಂತ್ಯದಲ್ಲಿ ನಿರ್ಧಾರ ತೆಗೆದುಕೊಳ್ಳುವುದರಿಂದ ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ವಿದ್ಯಾಗಮವನ್ನು ಪರಿಷ್ಕರಿಸಿ ಅನುಷ್ಠಾನ ಮಾಡಬೇಕೆಂಬ ಕೂಗು ಶಿಕ್ಷಕ ವರ್ಗದಿಂದ ಕೇಳಿಬರುತ್ತಿದೆ.
5ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಈಗಾಗಲೇ ಚಂದನ ವಾಹಿನಿಯಲ್ಲಿ ಸಂವೇದಾ ತರಗತಿಗಳು ಆರಂಭವಾಗಿವೆ. 8ರಿಂದ 10ನೇ ತರಗತಿ ವಿದ್ಯಾರ್ಥಿಗಳ ಸಂವೇದಾ ತರಗತಿಗಳು ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿವೆ. ಸರಕಾರಿ ಶಾಲೆಯ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವಿದ್ಯಾಗಮದಲ್ಲಿರುವ ನ್ಯೂನತೆಯನ್ನು ಸರಿಪಡಿಸಿ, ಅನುಷ್ಠಾನ ಮಾಡಬೇಕೆಂಬ ರಾಜ್ಯದ ವಿವಿಧ ಭಾಗದ ಶಿಕ್ಷಕರು ಆಗ್ರಹಿಸುತ್ತಿದ್ದಾರೆ.
ಸರಕಾರಿ ಶಾಲಾ ಮಕ್ಕಳಿಗೆ ಆನ್ಲೈನ್ ತರಗತಿ ನಡೆಸಲು ಸಾಧ್ಯವಿಲ್ಲ. ಸ್ಥಳೀಯವಾಗಿ ಶಿಕ್ಷಕರು ವಾಟ್ಸ್ಆ್ಯಪ್ ಗ್ರೂಪ್ಗ್ಳನ್ನು ರಚಿಸಿಕೊಂಡು ಪಠ್ಯ ಹಾಗೂ ಹೋಂ ವರ್ಕ್ಗಳನ್ನು ನೀಡುತ್ತಿದ್ದಾರೆ. ಆದರೆ, ಶಿಕ್ಷಕರು ವಾರಕ್ಕೆ ಒಮ್ಮೆಯೂ ಮಕ್ಕಳನ್ನು ಭೇಟಿಯಾಗಿ, ಕಲಿಕೆಯ ಪ್ರಗತಿ ಪರಿಶೀಲಿಸಲು ಸಾಧ್ಯವಾಗುತ್ತಿಲ್ಲ. ಗ್ರಾಮೀಣ ಭಾಗದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಮಸ್ಯೆ ಹೆಚ್ಚಿದೆ. ಹೀಗಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಕಾಪಾಡಲು ಇಲಾಖೆ ವಿದ್ಯಾಗಮ ಕಾರ್ಯಕ್ರಮವನ್ನು ಪುನರ್ ಆರಂಭಿಸಬೇಕು ಎಂದು ಶಿಕ್ಷಕರು ಒತ್ತಾಯಿಸುತ್ತಿದ್ದಾರೆ.