7ನೇ ತರಗತಿ ಪಬ್ಲಿಕ್ ಪರೀಕ್ಷೆ ಇನ್ನೂ ನಿರ್ಧಾರವಾಗಿಲ್ಲ
Team Udayavani, Dec 12, 2019, 3:00 AM IST
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೋ, ಬೇಡವೋ ಎಂಬ ಕುರಿತು ಸರ್ಕಾರಕ್ಕೆ ಇನ್ನೂ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಬುಧವಾರ ನಗರದ ನೃಪತುಂಗ ರಸ್ತೆಯ ಸರ್ವಶಿಕ್ಷಾ ಅಭಿಯಾನದ ಕಚೇರಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಈ ಸಂಬಂಧವಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರೂ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ.
ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಬಜೆಟ್ಗೆ ಸಂಬಂಧಿಸಿದಂತೆ ಹಲವು ವಿಚಾರಗಳ ಚರ್ಚೆ ಇದ್ದುದ್ದರಿಂದ ಏಳನೇ ತರಗತಿ ಪರೀಕ್ಷೆಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಅತಿ ಶೀಘ್ರದಲ್ಲಿ ಸಭೆ ಸೇರಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು.
ನೂತನ ವರ್ಗಾವಣೆ ನೀತಿ, ಹೊಸ ಯೋಜನೆ ಸೇರ್ಪಡೆ ಸೇರಿ ಮತ್ತಿತರ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಸಲಹೆಗಳನ್ನು ಸಂಗ್ರಹಿಸಿದರು. ಇದರಲ್ಲಿ ಅತ್ಯುತ್ತಮವಾದ ಸಲಹೆಗಳನ್ನು ಆಯ್ಕೆ ಮಾಡಿ ಮುಂದಿನ ವರ್ಷ ನಡೆಯಲಿರುವ ಪೂರ್ವಬಾವಿ ಬಜೆಟ್ನಲ್ಲಿ ಸೇರಿಸಲು ನಿರ್ಧರಿಸಲಾಯಿತು. ನೂತನ ವರ್ಗಾವಣೆ ನೀತಿಯಲ್ಲಿ ಶಿಕ್ಷಕರಿಗೆ ಅನುಕೂಲಕರವಾದ ಅಂಶಗಳನ್ನು ಸೇರಿಸಲಾಗಿದೆ. ಇದರಿಂದ ಸಾವಿರಾರು ಶಿಕ್ಷಕರಿಗೆ ಅನುಕೂಲವಾಗಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.