ಬಿಜೆಪಿ ಅಭ್ಯರ್ಥಿ ಸ್ಪರ್ಧೆಗೆ ಅವಕಾಶ ನೀಡಬಾರದು
Team Udayavani, Nov 18, 2019, 3:05 AM IST
ಬೆಂಗಳೂರು: ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಅಕ್ರಮ ಎಸಗಲು ಸಿದ್ಧತೆ ನಡೆಸಿದ್ದು, ಅಲ್ಲಿ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಭಾವಚಿತ್ರವಿರುವ 30 ಸಾವಿರ ಸೀರೆಗಳು ಲಭ್ಯವಾಗಿದ್ದು, ಹುಣಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧೆಗೆ ಚುನಾವಣಾ ಆಯೋಗ ಅವಕಾಶ ನೀಡಬಾರದು ಎಂದು ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆಗ್ರಹಿಸಿದ್ದಾರೆ.
ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹುಣಸೂರಿನಲ್ಲಿ ಯೋಗೇಶ್ವರ್ ಅವರ ಭಾವಚಿತ್ರವಿರುವ ಸೀರೆಗಳು ಪತ್ತೆಯಾಗಿವೆ. ಚುನಾವಣಾ ಆಯೋಗ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅವರು ಅಕ್ರಮ ಮಾರ್ಗವಾಗಿ ಚುನಾವಣೆ ಗೆಲ್ಲಲು ಪ್ರಯತ್ನ ನಡೆಸಿದ್ದಾರೆ. ಕೊನೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಬದಲಾಗಿರಬಹುದು. ಆದರೆ, ಬಿಜೆಪಿ ಇದನ್ನು ಮಾಡಿದೆ. ಹೀಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧೆಗೆ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಸ್ವಾತಂತ್ರ ಪೂರ್ವದಿಂದ ಸ್ವಾತಂತ್ರಾ ನಂತರ ಕಾಂಗ್ರೆಸ್ ಮಹಿಳೆಯರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ಮೀಸಲು, ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಕೈಗಾರಿಕಾ ಪಾರ್ಕ್ ಸ್ಥಾಪಿಸಿದೆ. ಉಪ ಚುನಾವಣೆಯಲ್ಲಿ ಹೊಸಕೋಟೆಯಲ್ಲಿ ಪದ್ಮಾವತಿ ಸುರೇಶ್ ಅವರಿಗೆ ಟಿಕೆಟ್ ನೀಡಲಾಗಿದ್ದು, ರಾಜ್ಯದ ಮಹಿಳೆಯರು ಕಾಂಗ್ರೆಸ್ ಸರ್ಕಾರದ ಹಿಂದಿನ ಸಾಧನೆಗಳನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸಬೇಕೆಂದು ಮನವಿ ಮಾಡಿದರು.