ಮಕ್ಕಳಿಗೆ ಸೈಕಲ್ ವಿತರಣೆ ಸ್ಥಗಿತ ಇಲ್ಲ
Team Udayavani, May 23, 2020, 6:54 AM IST
ಬೆಂಗಳೂರು: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಯ ಜತೆ ಕೊರೊನಾದಿಂದ ಹಣಕಾಸಿನ ಸಮಸ್ಯೆ ಎದುರಾದರೂ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಸ್ಥಗಿತಗೊಳಿ ಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಪರಿಸ್ಥಿತಿ ಉತ್ತಮ ಪಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವಿಶೇಷ ಗಮನ ಹರಿಸಬೇಕು. ಯಾವುದೇ ಪ್ರದೇಶದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಸಾಧನವಾಗಿರುವುದರಿಂದ ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಬೋಧನಾ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಶಿಕ್ಷಣ ಇಲಾಖೆ ಕೈಗೊಂಡಿರುವ ಕ್ರಮಗಳ ಕುರಿತು ಸಚಿವ ಸುರೇಶ್ ಕುಮಾರ್ ಸಭೆಯಲ್ಲಿ ವಿವರಿಸಿದರು. ಶಿಕ್ಷಣ ಇಲಾಖೆಗೆ ಪ್ರಸಕ್ತ ಸಾಲಿನಲ್ಲಿ ಸಮವಸOಉ, ಪಠ್ಯಪುಸ್ತಕ, ಆರ್ಟಿಇ ಮರುಪಾವತಿಯಂತಹ ಪ್ರಮುಖ ಯೋಜನಾ ಕಾರ್ಯಕ್ರಮಗಳಿಗೆ ಒದಗಿಸಲಾಗಿ ರುವ 2362 ಕೋಟಿ ರೂ. ಅನುದಾನದಲ್ಲಿ ಯಾವುದೇ ರೀತಿಯ ಕಡಿತ ಮಾಡದೇ ಪೂರ್ಣ ಪ್ರಮಾಣದ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.
ಕೋವಿಡ್-19 ನಂತರದ ಪರಿಸ್ಥಿತಿ ಎದುರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹಲವು ಶಿಕ್ಷಣ ಸ್ನೇಹಿ, ವಿದ್ಯಾಸ್ನೇಹಿ ನಿರ್ಣಯಗಳನ್ನು ತೆಗೆದುಕೊಂಡಿದೆ. ಶೈಕ್ಷಣಿಕ ವರ್ಷಕ್ಕೆ ಕೋವಿಡ್ -19 ಹೊಡೆತ ನೀಡಿರುವುದರಿಂದ ಪ್ರತಿ ತರಗತಿಗಳ ಪಠ್ಯ ಕಡಿತಕ್ಕೆ ತಜ್ಞರ ಸಮಿತಿ ವರದಿ ಆಧಾರದಲ್ಲಿ ಇಲಾಖೆ ಕ್ರಮ ವಹಿಸುತ್ತಿದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.