ಪ್ರವಾಹ ಪ್ರದೇಶಗಳಲ್ಲಿ ಪಾದಯಾತ್ರೆಗೆ ಚಿಂತನೆ
Team Udayavani, Oct 23, 2019, 3:05 AM IST
ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಪ್ರವಾಹ ಉಂಟಾಗಿರುವುದರಿಂದ ಸಂಕಷ್ಟದಲ್ಲಿ ಸಿಲುಕಿರುವ ಜನರ ನೋವಿಗೆ ಸ್ಪಂದಿಸಲು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪಾದಯಾತ್ರೆ ಮಾಡಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಈ ಕುರಿತಂತೆ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬುಧವಾರ ಸಭೆ ಕರೆದಿದ್ದಾರೆ.
ಪ್ರವಾಹ ಪೀಡಿತ ಪ್ರದೇಶದ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎನ್ನುವ ಆರೋಪ ಇದ್ದು, ಮುಂಗಾರು ಹಂಗಾಮಿನಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ ಸಂತ್ರಸ್ತರಾದವರಿಗೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ತಲುಪಿಸುವ ಮೊದಲೇ ಮತ್ತೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಇದರಿಂದ ಉತ್ತರ ಕರ್ನಾಟಕ ಭಾಗದ ಜನರು ತೊಂದರೆಗೆ ಸಿಲುಕಿದ್ದು, ಅವರೊಂದಿಗೆ ಕಾಂಗ್ರೆಸ್ ಪಕ್ಷ ಇದೆ ಎನ್ನುವ ಸಂದೇಶ ರವಾನಿಸಲು ಹಾಗೂ ಆಡಳಿತ ಪಕ್ಷ ಬಿಜೆಪಿ ಪ್ರವಾಹ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎನ್ನುವುದನ್ನು ಮನವರಿಕೆ ಮಾಡಿಕೊಡಲು ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದೆ ಎಂದು ತಿಳಿದು ಬಂದಿದೆ.
ವೀಕ್ಷಕರ ಸಭೆ: ಇದಕ್ಕೂ ಮೊದಲ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿರುವುದ ರಿಂದ ಆ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಹಾಗೂ ಚುನಾವಣೆ ಸಿದ್ಧತೆ ಕುರಿತು ಮಾಹಿತಿ ಪಡೆಯಲು ಕೆಪಿಸಿಸಿ ವತಿಯಿಂದ ವೀಕ್ಷಕರ ಸಭೆ ಕರೆಯಲಾಗಿದ್ದು, 14 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಕುರಿತಂತೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.