ಮುಂಬೈನಿಂದ ಜಾಗ ಖಾಲಿ ಮಾಡಿದ ಅತೃಪ್ತರು?
Team Udayavani, Jul 9, 2019, 3:00 AM IST
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮುಂಬೈನ ಸೋಫಿಟೆಲ್ ಹೊಟೇಲ್ನಲ್ಲಿ ವಾಸ್ತವ್ಯ ಹೂಡಿರುವ ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಸ್ಥಳ ಬದಲಾವಣೆ ಮಾಡಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ. ತಮ್ಮ ಮನವೊಲಿಕೆಗೆ ರಾಜ್ಯದ ಸಚಿವರು ಆಗಮಿಸುತ್ತಿದ್ದಾರೆ ಎನ್ನುವ ಕಾರಣಕ್ಕೆ ಮುಂಬೈನಿಂದ ಬೇರೆ ರಾಜ್ಯಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜೀನಾಮೆ ನೀಡಿರುವ ಶಾಸಕರು ಮುಂಬೈನಲ್ಲಿ ವಾಸ್ತವ್ಯ ಹೂಡಿರುವುದರಿಂದ ಸ್ಥಳೀಯ ಕಾಂಗ್ರೆಸ್ ಪ್ರತಿದಿನ ಶಾಸಕರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ರಾಜ್ಯದ ಸಚಿವರಾದ ಡಿ.ಕೆ.ಶಿವಕುಮಾರ್, ಜಮೀರ್ ಅಹಮದ್, ಸಾ.ರಾ. ಮಹೇಶ್ ಮನವೊಲಿಕೆಗೆ ಆಗಮಿಸುತ್ತಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಅತೃಪ್ತರು ಸ್ಥಳ ಬದಲಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳವಾರ ಗೋವಾ ಅಥವಾ ದೆಹಲಿಗೆ ಅತೃಪ್ತರು ತೆರಳಲು ವಿಮಾನ ಬುಕ್ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ಗೋವಾದ ಹಯಾತ್ ಅಥವಾ ಲೀಲಾ ಹೋಟೆಲ್ ಬುಕ್ ಮಾಡಲಾಗಿದೆ ಎಂಬ ಮಾಹಿತಿಯೂ ಇದೆ. ಅಲ್ಲದೇ, ಇನ್ನೊಂದು ಮೂಲಗಳ ಪ್ರಕಾರ ದೆಹಲಿಯಲ್ಲಿಯೂ ಹೋಟೆಲ್ ಬುಕ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಮುಂಬೈನಲ್ಲಿ ಕಾಂಗ್ರೆಸ್ ಪ್ರತಿಭಟನೆ ಜೋರಾಗಿದ್ದು, ದಿನದಿಂದ ದಿನಕ್ಕೆ ರಾಜೀನಾಮೆ ಸಲ್ಲಿಸಿ ಹೊಟೇಲ್ಗೆ ಬರುತ್ತಿರುವುದಿಂದ ಗೊಂದಲ ಉಂಟಾಗುತ್ತಿದೆ ಎನ್ನುವ ಕಾರಣಕ್ಕೆ ಸ್ಥಳ ಬದಲಾವಣೆಗೆ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.