ಸಣ್ಣ ಹಿಡುವಳಿ ರೈತರನ್ನು ಒಕ್ಕಲೆಬ್ಬಿಸುವ ಕಾರ್ಯ: ಮಧು ಬಂಗಾರಪ್ಪ ಆಕ್ರೋಶ
Team Udayavani, Mar 28, 2023, 6:40 AM IST
ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ತಾಳಗುಪ್ಪ ಹೋಬಳಿಯಲ್ಲಿ ಸರ್ಕಾರ ಸಾಗುವಳಿ ನಡೆಸುತ್ತಿರುವ ಸಣ್ಣ ಹಿಡುವಳಿ ರೈತರನ್ನು ಒಕ್ಕಲೆಬ್ಬಿಸುವ ಕಾರ್ಯಕ್ಕೆ ಮುಂದಾಗಿದೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ಆರೋಪಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು ತಾಳಗುಪ್ಪ ಹೋಬಳಿಯಲ್ಲಿ ಸಣ್ಣ ಹಿಡುವಳಿ ರೈತರು ತಮ್ಮ ಜೀವನೋಪಾಯಕ್ಕಾಗಿ ಸುಮಾರು 4 ತಲೆಮಾರುಗಳಿಂದ ಸಾಗುವಳಿ ನಡೆಸುತ್ತಿದ್ದು ಅವರನ್ನು ಒಕ್ಕಲಿಬ್ಬಿಸಿದಂತೆ ಹಿಂದಿನ ಸರ್ಕಾರ ಕಾನೂನು ಜಾರಿಗೆ ತಂದು ರಕ್ಷಣೆ ನೀಡಿದೆ. ಆದರೆ ಇಂದಿನ ಸರ್ಕಾರದ ಜನ ವಿರೋಧಿ ನೀತಿ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷದಿಂದಾಗಿ, ಅರಣ್ಯ ಇಲಾಖೆ ಸಿಬ್ಬಂದಿ ಏಕಾಏಕಿ ರೈತರ ಜಮೀನಿಗೆ ಜೆಸಿಬಿ ಹಾಗೂ ಕಟರ್ ಮಿಷನ್ಗಳ ಮೂಲಕ ಅಡಿಕೆ, ತೆಂಗು, ಬಾಳೆ ಮರಗಳನ್ನ ಸರ್ವ ನಾಶ ಮಾಡುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಬಂದು ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಸಿ 15 ದಿನಗಳಲ್ಲಿ ಹಕ್ಕು ಪತ್ರ ನೀಡುವುದಾಗಿ ಹುಸಿ ಭರವಸೆ ನೀಡಿ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.
ಸದರಿ ಪ್ರಕರಣ ನ್ಯಾಯಾಲಯದಲ್ಲಿದ್ದು ನ್ಯಾಯಾಲಯದ ಆದೇಶವಿಲ್ಲದಿದ್ದರೂ ಏಕಾಏಕಿ ತೆರವು ಗೊಳಿಸಿರುವುದನ್ನು ಕೋರ್ಟ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ಕಳೆದ 11 ವರ್ಷಗಳ ಹಿಂದೆ ಇದೇ ಭಾಗದಲ್ಲಿ ಇಂಥದೇ ಪ್ರಕರಣ ನಡೆದಿದ್ದು ನಾನು ಶಾಸಕನಾದ ಮೇಲೆ ಬಗರ್ ಹುಕುಂ ರೈತರಿಗೆ ಹಕ್ಕು ಪತ್ರ ನೀಡುವ ಪ್ರಮಾಣಿಕ ಪ್ರಯತ್ನ ಮಾಡಿದ್ದೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಬಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನ ನೇತೃತ್ವದಲ್ಲಿ ಸಭೆ ನಡೆಸಿ ಕೇವಲ 15 ದಿನಗಳಲ್ಲಿ ಹಕ್ಕು ಪತ್ರ ನೀಡುವುದಾಗಿ ಹುಸಿ ಭರವಸೆ ನೀಡಿ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.