ಲಸಿಕೆ ವಿತರಣೆಯ ಕಾರ್ಯ ಜನಾಂದೋಲನದಂತೆ ನಡೆಯಬೇಕಿದೆ: ಡಾ.ಕೆ.ಸುಧಾಕರ್
Team Udayavani, Jan 7, 2021, 10:06 PM IST
ಬೆಂಗಳೂರು: ಕೊರೊನಾ ಲಸಿಕೆ ರಾಜ್ಯದಕ್ಕೆ ಬಂದ ಬಳಿಕ ವಿತರಣೆಯ ಕಾರ್ಯ ಜನಾಂದೋಲನದಂತೆ ನಡೆಯಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ವಿಧಾನಸೌಧದಲ್ಲಿ ಕೇಂದ್ರ ಆರೋಗ್ಯ ಸಚಿವರ ವಿಡಿಯೋ ಸಂವಾದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಲಸಿಕೆಯ ವಿತರಣೆಗೆ ಸಿದ್ಧತೆ, ಕೇಂದ್ರ ಸರ್ಕಾರದಿಂದ ಬೇಕಿರುವ ಸಹಾಯದ ಬಗ್ಗೆ ಗುರುವಾರ ನಡೆದ ಕೇಂದ್ರ ಆರೋಗ್ಯ ಸಚಿವರೊಂದಿಗೆ ನಡೆದ ಸಭೆಯಲ್ಲಿ ಚರ್ಚೆಯಾಗಿದೆ. ಲಸಿಕೆ ಬಂದ ಬಳಿಕ ವಿತರಣೆಯ ಕಾರ್ಯ ಜನಾಂದೋಲನದಂತೆ ನಡೆಯಬೇಕಿದೆ. ಇದಕ್ಕಾಗಿಯೇ ಸಿಬ್ಬಂದಿಗೆ ಹೆಚ್ಚಿನ ತರಬೇತಿ ನೀಡಲಾಗುತ್ತಿದೆ. ಜನವರಿ 8 ರಂದು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಮೂರು ಕಡೆ ಲಸಿಕೆ ವಿತರಣೆಯ ತಾಲೀಮು ನಡೆಯಬೇಕಿತ್ತು. ಆದರೆ, ನಮ್ಮ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಏಳು ವ್ಯವಸ್ಥೆಯಲ್ಲಿ ತಯಾರಿ ಮಾಡಿಕೊಂಡು 263 ಪ್ರದೇಶಗಳಲ್ಲಿ ಲಸಿಕೆಯ ವಿತರಣೆ ನಡೆಯಲಿದೆ ಎಂದರು.
ಕೇಂದ್ರ ಸರ್ಕಾರ 24 ಲಕ್ಷ ಸಿರಿಂಜುಗಳನ್ನು ಕಳುಹಿಸಿಕೊಟ್ಟಿದೆ. ಇವುಗಳನ್ನು ಎಲ್ಲ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗಿದೆ. ರಾಜ್ಯದಲ್ಲಿ 10 ವಾಕ್ ಇನ್ ಕೂಲರ್, 4 ವಾಕ್ ಇನ್ ಫ್ರೀಜರ್, 3,201 ಐಎಲ್ಆರ್, 3039 ಡೀಪ್ ಫ್ರೀಜರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ಲಭ್ಯವಿದೆ. ಕೇಂದ್ರ ಸರ್ಕಾರವು 225 ಲೀಟರ್ ಸಾಮರ್ಥ್ಯದ 64 ಐಎಲ್ ಆರ್ ಗಳನ್ನು ಕಳುಹಿಸಿಕೊಟ್ಟಿದೆ. ಇನ್ನೂ 2 ವಾಕ್ ಇನ್ ಕೂಲರ್, 1 ವಾಕ್ ಇನ್ ಫ್ರೀಜರ್ ಕಳುಹಿಸಿಕೊಡುವುದಾಗಿ ಕೇಂದ್ರ ತಿಳಿಸಿದೆ ಎಂದು ಮಾಹಿತಿ ನೀಡಿದರು.
ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 6.30 ಲಕ್ಷ ಸಿಬ್ಬಂದಿ ಲಸಿಕೆ ವಿತರಣೆಗೆ ಹೆಸರು ನೋಂದಾಯಿಸಿಕೊಂಡಿ¨ªಾರೆ. ಇನ್ನೂ ಕೂಡ ನೋಂದಣಿ ಮಾಡಿಸಲು ಅವಕಾಶವಿದೆ. 1 ಕೋಟಿ ಲಸಿಕೆಗಳನ್ನು ಕೇಂದ್ರ ಸರ್ಕಾರ ನಾನಾ ರಾಜ್ಯಗಳಿಗೆ ನೀಡಲಿದೆ. ಪೊಲೀಸರು, ಆರೋಗ್ಯ ಸಿಬ್ಬಂದಿ, ರಕ್ಷಣಾ ಸಿಬ್ಬಂದಿ, ಕೊರೊನಾ ನಿಯಂತ್ರಣದಲ್ಲಿ ಕಾರ್ಯಪ್ರವೃತ್ತರಾಗಿರುವವರಿಗೆ ಲಸಿಕೆ ಮೊದಲಿಗೆ ದೊರೆಯಲಿದೆ ಎಂದು ತಿಳಿಸಿದರು.
ಜ.17 ಪೊಲಿಯೋ ಲಸಿಕೆ
ಜನವರಿ 17 ರಂದು ಪೊಲಿಯೋ ಲಸಿಕೆ ವಿತರಣೆ ಕಾರ್ಯ ನಡೆಯಲಿದೆ. ಒಟ್ಟು 65 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಉದ್ದೇಶವಿದೆ. ಈ ಕುರಿತು ಎಲ್ಲಾ ತಯಾರಿ ನಡೆಸಲಾಗಿದೆ. ಕೊರೊನಾ ಲಸಿಕೆಯಿಂದ ಯಾವುದೇ ಅಪಾಯವಿಲ್ಲ. ಇದರಿಂದಾಗಿ ಜನರಿಗೆ ಅನುಕೂಲವಾಗುತ್ತದೆ. ಎಲ್ಲರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಹಕ್ಕಿಜ್ವರ ಭೀತಿ ಬೇಡ
ಲಕ್ಷಾಂತರ ಮಕ್ಕಳು ಶಾಲೆಗೆ ಹೋಗುತ್ತಿರುವ ಸಮಯದಲ್ಲಿ ಕೊರೊನಾ ಬಗ್ಗೆ ವಿನಾಕಾರಣ ಭೀತಿ ಮೂಡಿಸಬಾರದು. ಸರ್ಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿದೆ. ದಕ್ಷಿಣ ಕನ್ನಡದಲ್ಲಿ 6 ಕಾಗೆಗಳು ಸಾವನ್ನಪ್ಪಿದ್ದು, ಪರೀಕ್ಷೆಗೆ ಕಳುಹಿಸಲಾಗಿದೆ. ಹಕ್ಕಿಜ್ವರ ಬಾರದಂತೆ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.