ಸಿಎಂ ಕಾರಂತ ಬಡಾವಣೆ ಕೈಬಿಡುವ ಭರವಸೆ ನೀಡಿಲ್ಲ : ವಿಶ್ವನಾಥ್ ಸ್ಪಷ್ಟನೆ
Team Udayavani, Mar 25, 2021, 5:10 PM IST
ಬೆಂಗಳೂರು : ಬಿಡಿಎ ಕೈಗೆತ್ತಿಕೊಳ್ಳುತ್ತಿರುವ ಡಾ.ಶಿವರಾಂ ಕಾರಂತ ಬಡಾವಣೆ ನಿರ್ಮಾಣ ಯೋಜನೆಯನ್ನು ಕೈಬಿಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರೈತ ಮುಖಂಡರಿಗೆ ಯಾವುದೇ ಭರವಸೆ ನೀಡಿಲ್ಲ ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸ್ಪಷ್ಟನೆ ನೀಡಿದ್ದಾರೆ.
ಕಾರಂತ ಬಡಾವಣೆ ಕೈಬಿಡುವಂತೆ ಒತ್ತಾಯಿಸಿ ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ ನಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ನಂತರ ಬಡಾವಣೆಯನ್ನು ಕೈಬಿಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.
ಈ ಬಗ್ಗೆ ಸ್ಪಷ್ಟನೆ ನೀಡಿರುವ ವಿಶ್ವನಾಥ್, ಪ್ರತಿಭಟನೆ ನಡುವೆಯೇ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ನಿಯೋಗ ಮನವಿ ಸಲ್ಲಿಸಿತು ಎಂದರು.
ಮುಖ್ಯಮಂತ್ರಿಗಳು ಭೂಸ್ವಾಧೀನ ಕೈಬಿಡುವ ಬಗ್ಗೆಯಾಗಲೀ ಅಥವಾ ಯೋಜನೆಯನ್ನು ಕೈಬಿಡುವ ಬಗ್ಗೆಯಾಗಲೀ ಯಾವುದೇ ಭರವಸೆಯನ್ನು ಕೊಟ್ಟಿಲ್ಲ. ಆದರೆ, ಕೋಡಿಹಳ್ಳಿ ಚಂದ್ರಶೇಖರ್ ಅವರು ಮಾಧ್ಯಮಗಳ ಮೂಲಕ ಈ ವಿಚಾರದಲ್ಲಿ ತಪ್ಪು ಸಂದೇಶವನ್ನು ನೀಡಿದ್ದಾರೆ ಎಂದು ವಿಶ್ವನಾಥ್ ಹೇಳಿದರು.
ಬಡಾವಣೆ ವಿಚಾರ ಸುಪ್ರೀಂಕೋರ್ಟಿನಲ್ಲಿ ಇರುವ ಹಿನ್ನೆಲೆಯಲ್ಲಿ ಈ ಬಗ್ಗೆ ಅಡ್ವೋಕೇಟ್ ಜನರಲ್ ಜತೆಗೆ ಚರ್ಚೆ ನಡೆಸುತ್ತೇನೆ ಎಂದಷ್ಟೇ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಯಾವುದೇ ತಪ್ಪು ಸಂದೇಶಗಳು ಅಥವಾ ಮಾಹಿತಿಗಳಿಗೆ ಕಿವಿಗೊಡಬಾರದು ಎಂದು ವಿಶ್ವನಾಥ್ ಮನವಿ ಮಾಡಿದರು.
ಅಲ್ಲದೇ, ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡುವ ತೀರ್ಪಿಗೆ ಸರ್ಕಾರ ಮತ್ತು ಬಿಡಿಎ ಬದ್ಧವಾಗಿರುತ್ತದೆ ಎಂದೂ ಅವರು ಸ್ಪಷ್ಟಪಡಿಸಿದರು.