
Water Problem ಶಾಲೆಗಳ ಆರಂಭ 1 ವಾರ ಮುಂದೂಡಲು ಯಶ್ ಪಾಲ್ ಸುವರ್ಣ ಮನವಿ
ಸಿಎಂ, ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಮನವಿ
Team Udayavani, May 26, 2023, 5:57 PM IST

ಉಡುಪಿ: ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಶಾಲೆಗಳ ಆರಂಭ 1 ವಾರ ಮುಂದೂಡಿಕೆಗೆ ಮುಖ್ಯ ಮಂತ್ರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸಹಿತ ರಾಜ್ಯದ ವಿವಿಧೆಡೆ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಆರಂಭವನ್ನು 1 ವಾರಗಳ ಮುಂದೂಡುವಂತೆ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿ ಯವರಿಗೆ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಶಿಕ್ಷಣ ಇಲಾಖೆಯ ಆದೇಶದಂತೆ ಮೇ 31 ರಂದು ಆರಂಭಗೊಳ್ಳಲಿದೆ. ಈ ಬಾರಿ ಮುಂಗಾರು ಮಳೆಯ ವಿಳಂಬದಿಂದಾಗಿ ರಾಜ್ಯದ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ರಾಜ್ಯದ ಹಲವು ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ಶಾಲಾ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಪೂರೈಕೆ, ಬಿಸಿಯೂಟ ಹಾಗೂ ಶಾಲೆಯ ಪರಿಸರದ ಶುಚಿತ್ವ ಕಾಪಾಡಲು ಕಷ್ಟ ಸಾಧ್ಯವಾಗಿದೆ. ಇದರಿಂದ ಶಾಲಾ ವಿದ್ಯಾರ್ಥಿಗಳ ಆರೋಗ್ಯ ಹಾಗೂ ದೈನಂದಿನ ಚಟುವಟಿಕೆಗೆ ತೊಂದರೆಯಾಗಲಿದೆ ಎಂದು ಸುವರ್ಣ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ಶಾಲಾ ಆರಂಭವನ್ನು ಒಂದು ವಾರಗಳ ಕಾಲ ಮುಂದೂಡಿಕೆಗೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
