Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
ಪಾಪ ಕೃತ್ಯ... ದೇವೇಗೌಡರು ಮತ್ತು ಕುಮಾರಸ್ವಾಮಿ ಮನೆಗೆ ವಕೀಲರನ್ನು ಕರೆಸಿ ಮಾತಾಡಿದ್ದಾರೆ
Team Udayavani, May 3, 2024, 5:59 PM IST
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡಲು ಸೂಚಿಸಿದ್ದೇನೆ. ವಿಪರ್ಯಾಸವೆಂದರೆ ಕೇಂದ್ರ ಸರ್ಕಾರ ಆರೋಪಿಯ ರಕ್ಷಣೆಗೆ ನಿಂತಿದೆ’ ಎಂದು ಸಿಎಂ ಸಿದ್ದರಾಮಯ್ಯ ಶುಕ್ರವಾರ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ‘ತಮಗೂ ರೇವಣ್ಣನ ಕುಟುಂಬಕ್ಕೂ ಸಂಬಂಧವಿಲ್ಲ ಎನ್ನುತ್ತಿದ್ದ ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದರು. ರಾಜಕೀಯ ಹಾಗೂ ಪಾಪ ಕೃತ್ಯಗಳನ್ನು ಅವರೆಲ್ಲರೂ ಒಟ್ಟಿಗೆ ಮಾಡುತ್ತಾರೆ” ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
‘ಅಂತಾರಾಷ್ಟ್ರೀಯ ಪ್ರಯಾಣ ಮಾಡುವಾಗ ಎಲ್ಲರ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ.ಪ್ರಜ್ವಲ್ ರೇವಣ್ಣ ದುಬೈ ಆಗಲಿ ಇನ್ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಅವರ ರಾಜತಾಂತ್ರಿಕ ಪಾಸ್ ಪೋರ್ಟನ್ನು ರದ್ದು ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ.ಪ್ರಜ್ವಲ್ ರೇವಣ್ಣ ಅವರ ಕೃತ್ಯದ ಬಗ್ಗೆ ತಿಳಿದೂ ಬಿಜೆಪಿಯು ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ’ ಎಂದು ಕಿಡಿ ಕಾರಿದರು.
”ಅತ್ಯಾಚಾರ, ಕೊಲೆ ಬೆದರಿಕೆಯಂತಹ ಗಂಭೀರ ಸ್ವರೂಪದ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ರಕ್ಷಣೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಿನ್ನೆ ವಕೀಲರ ಜೊತೆ ಚರ್ಚೆ ನಡೆಸಿರುವುದು ನಾಚಿಕೆಗೇಡು.ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎನ್ನುವವರೂ ಅವರೇ, ಆರೋಪಿಯ ರಕ್ಷಣೆಗೆ ನಿಂತಿರುವವರೂ ಅವರೇ” ಎಂದು ಆಕ್ರೋಶ ಹೊರ ಹಾಕಿದ್ದಾರೆ.