“ಯತ್ನಾಳ ನಿರುದ್ಯೋಗಿ ರಾಜಕಾರಣಿ’
Team Udayavani, Mar 2, 2020, 3:05 AM IST
ಹುಬ್ಬಳ್ಳಿ: “ಶಾಸಕ ಬಸವರಾಜ ಪಾಟೀಲ ಯತ್ನಾಳ ಒಬ್ಬ ನಿರುದ್ಯೋಗಿ ರಾಜಕಾರಣಿ. ಅವರು ಹುಚ್ಚು ಹುಚ್ಚಾಗಿ ಹೇಳಿಕೆ ನೀಡುತ್ತಿದ್ದಾರೆ. ಕೂಡಲೇ ಅವರ ಶಾಸಕತ್ವ ರದ್ದುಪಡಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ವಾತಂತ್ರ ಯೋಧ ಎಚ್.ಎಸ್. ದೊರೆಸ್ವಾಮಿ ವಿರುದ್ಧ ಅವರು ಅವಹೇಳನ ಕಾರಿಯಾಗಿ ಮಾತನಾಡಿದ್ದು ಖಂಡನೀಯವೆಂದರು.
ಸಿಎಂ ಬಿ.ಎಸ್.ಯಡಿ ಯೂರಪ್ಪ ಜನ್ಮದಿನಕ್ಕೆ ಸಿದ್ದರಾಮಯ್ಯ ಹೋಗಿದ್ದರಲ್ಲಿ ಯಾವುದೇ ತಪ್ಪಿಲ್ಲ. ಯಾರೂ ಇದನ್ನು ವಿರೋಧಿಸಿಲ್ಲ. ರಾಜಕೀಯವೇ ಬೇರೆ, ವೈಯಕ್ತಿಕ ಸಂಬಂಧವೇ ಬೇರೆ ಎಂಬುದನ್ನು ಸಿದ್ದರಾಮಯ್ಯ ಅವರೇ ತಿಳಿಸಿದ್ದಾರೆಂದರು. ಕೆಪಿಸಿಸಿ ಅಧ್ಯಕ್ಷರ ನೇಮಕ ಶೀಘ್ರದಲ್ಲೇ ಆಗಲಿದೆ. ಪಕ್ಷದ ವೀಕ್ಷಕರು ರಾಜ್ಯದ ವಿವಿಧೆಡೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ನಾಳೆ ನೇಮಕವಾದರೂ ಆಶ್ಚರ್ಯವಿಲ್ಲ ಎಂದರು.
ಖಂಡನಾ ನಿರ್ಣಯ
ಬೆಂಗಳೂರು: ಎಚ್.ಎಸ್. ದೊರೆಸ್ವಾಮಿ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೀಡಿರುವ ಹೇಳಿಕೆ ಖಂಡಿಸಿ ಸಾಹಿತಿಗಳು, ಪ್ರಗತಿಪರರು, ರಾಜಕೀಯ ಪಕ್ಷಗಳ ಮುಖಂಡರು ನಗರ ಗಾಂಧಿಭವನದಲ್ಲಿ ಭಾನುವಾರ ಸಭೆ ನಡೆಸಿದರು. ಸಭೆಯಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಪ್ರಮುಖ ರಾಜಕೀಯ ಮುಖಂಡರು ಹಾಜರಿದ್ದರು.
ವಿಧಾನಸೌಧದ ಒಳಗೆ ಯತ್ನಾಳರನ್ನು ಬಿಡಬಾರದು ಮತ್ತು ಅವರ ಶಾಸಕ ಸ್ಥಾನವನ್ನು ರದ್ದು ಮಾಡಬೇಕು. ಯತ್ನಾಳ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಗುಂಡಿಗೆ ದೊರೆಸ್ವಾಮಿ ಬಲಿಯಾಗುತ್ತಾರೆಂದು ಹೇಳಿದ್ದರಿಂದ ಕೊಲೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.
ಯತ್ನಾಳ್ ಹೇಳಿಕೆಯನ್ನು ಸಮರ್ಥಿಸಿದ ಬಿಜೆಪಿಯ ಮುಖಂಡರು ಸ್ವಾತಂತ್ರ ಹೋರಾಟಗಾರರಲ್ಲಿ ಮತ್ತು ನಾಡಿನ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂಬ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ. ಈ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಸಿದ್ದರಾಮಯ್ಯ ಹೇಳಿದರು.