ಅನರ್ಹತೆಗೆ ಕಾರಣವಾದ ಕೋಲಾರದಲ್ಲೇ ಶಕ್ತಿ ಪ್ರದರ್ಶನ
Team Udayavani, Mar 30, 2023, 6:05 AM IST
ಕೋಲಾರದಲ್ಲಿ ಮಾಡಿದ ಭಾಷಣದಿಂದಲೇ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದ ಕಾಂಗ್ರೆಸ್ ವರಿಷ್ಠ ರಾಹುಲ್ಗಾಂಧಿ, ತಮ್ಮ ಅನರ್ಹತೆಯನ್ನೇ ಚುನಾವಣ ಅಸ್ತ್ರವನ್ನಾಗಿಸಲು ಮುಂದಾಗಿದ್ದಾರೆ.
ಕಳೆದ ಲೋಕಸಭಾ ಚುನಾವಣ ಸಂದರ್ಭದಲ್ಲಿ ಕೋಲಾರದಲ್ಲಿ ರಾಹುಲ್ ಗಾಂಧಿ ಮಾಡಿದ್ದ ಭಾಷಣದಲ್ಲಿ ಲೂಟಿಕೋರ ರೆಲ್ಲರೂ ಮೋದಿ ಹೆಸರಿನವರೇ ಆಗಿರುವುದೇಕೆ ಎಂಬ ವ್ಯಂಗ್ಯದ ಮಾತುಗಳಿಗಾಗಿ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಸಜೆ ಶಿಕ್ಷೆ ಅನುಭವಿಸಿ ಸಂಸತ್ ಸ್ಥಾನದಿಂದ ಅನರ್ಹಗೊಂಡಿದ್ದಾರೆ.
ಕರ್ನಾಟಕದ ಚುನಾವಣೆ ಆರಂಭವಾಗುವ ಹೊತ್ತಿನಲ್ಲೇ ಕಾಂಗ್ರೆಸ್ ವರಿಷ್ಠ ರಾಹುಲ್ಗಾಂಧಿ ಸಂಸತ್ ಸ್ಥಾನದಿಂದ ಅನರ್ಹಗೊಂಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ವಿರುದ್ಧ ತಿರುಗಿ ಬೀಳಲು ದೊಡ್ಡ ಅಸ್ತ್ರ ಸಿಕ್ಕಂತಾಗಿದೆ.
ರಾಹುಲ್ ಅನರ್ಹತೆಯನ್ನೇ ಚುನಾವಣ ಅಸ್ತ್ರವನ್ನಾಗಿ ಸಲು ಕೋಲಾರ ನೆಲವೇ ಸೂಕ್ತ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಬಂದಿದೆ. ಇದೇ ಕಾರಣದಿಂದ ಕೆಪಿಸಿಸಿ ರಾಹುಲ್ ಗಾಂಧಿಗೆ ಅಹ್ವಾನ ನೀಡಿದ್ದು, ಯಾವ ನೆಲದಲ್ಲಿ ನಿಂತು ಮಾಡಿದ ಭಾಷಣಕ್ಕಾಗಿ ಅನರ್ಹಗೊಳ್ಳಬೇಕಾಯಿತೋ ಅದೇ ನೆಲದಿಂದ ಕರ್ನಾಟಕದ ಚುನಾವಣ ಪ್ರಚಾರವನ್ನು ಆರಂಭಿಸಬೇಕು, ಹಾಗೆಯೇ ಅನರ್ಹಗೊಳಿಸಿರುವ ಬಿಜೆಪಿಗೆ ತಿರುಗೇಟು ನೀಡಬೇಕು ಎಂಬ ಕಾರ್ಯತಂತ್ರವನ್ನು ಕಾಂಗ್ರೆಸ್ ರೂಪಿಸಿದೆ.
ಕೋಲಾರದಿಂದ ಆರಂಭವಾಗುವ ಈ ಚುನಾವಣ ಅಸ್ತ್ರವನ್ನು ರಾಜ್ಯಾದ್ಯಂತ ಪ್ರಯೋಗಿಸಲು ನಿರ್ಧರಿಸಿರುವ ಕಾಂಗ್ರೆಸ್ ಪಕ್ಷವು, ಕೋಲಾರದಲ್ಲಿ ನಡೆಯುವ ರಾಹುಲ್ ಗಾಂಧಿ ಸಮಾವೇಶಕ್ಕೆ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಯಕರ್ತರನ್ನು ಸೇರಿಸಲು ಮುಂದಾಗಿದೆ.
ಸುಮಾರು ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ರಾಹುಲ್ಗಾಂಧಿ ಸಮಾವೇಶಕ್ಕೆ ಸೇರಿಸಲು ಕಾಂಗ್ರೆಸ್ ತಯಾರಿ ನಡೆಸಿದ್ದು, ಇದಕ್ಕಾಗಿ ಕ್ಷೇತ್ರವಾರು ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದೆ.
ಕೋಲಾರ ನಗರದ ಹೊರವಲಯದ ದೇವರಾಜ ಅರಸು ವೈದ್ಯಕೀಯ ಕಾಲೇಜಿನ ಮುಂಭಾಗದ ವಿಶಾಲವಾದ ಖಾಸಗಿ ಪ್ರದೇಶವನ್ನು ರಾಹುಲ್ಗಾಂಧಿ ಸಮಾವೇಶಕ್ಕಾಗಿ ಗುರುತಿಸಲಾಗಿದೆ. ಕಳೆದ ತಿಂಗಳು ಇದೇ ಜಾಗದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮವು ನಡೆದಿತ್ತು. ಮಂಗಳವಾರ ಕಾಂಗ್ರೆಸ್ ಮುಖಂಡರು ಸ್ಥಳ ಪರಿಶೀಲನೆಯನ್ನು ನಡೆಸಿದ್ದು, ವಿವಿಧ ರೀತಿಯ ತಯಾರಿಗಳನ್ನು ನಡೆಸಲಾಗುತ್ತಿದೆ.
ಎಐಸಿಸಿಯ ಅಭಿಷೇಕ್ ದತ್ತ ನೇತೃತ್ವದಲ್ಲಿ ಮೂರು ಜಿಲ್ಲೆಗಳ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಿ ಜನರನ್ನು ಕ್ರೋಢೀಕರಿಸುವ ಕುರಿತು ಅಗತ್ಯ ಸಿದ್ಧತೆಗಳನ್ನು ನಡೆಸುವ ಜವಾಬ್ದಾರಿಗಳನ್ನು ಮುಖಂಡರಿಗೆ ಒಪ್ಪಿಸುತ್ತಿದ್ದಾರೆ.
ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸ್ವಾಗತಿಸಲು ಉತ್ಸುಕತೆಯಿಂದ ಓಡಾಡುತ್ತಿದ್ದಾರೆ. ಕೋಲಾರ ಜತೆಗೆ ಬೆಂಗಳೂರು ಗ್ರಾಮಾಂತರ ಪ್ರದೇಶದಿಂದಲೂ ಜನರನ್ನು ಕರೆ ತರುವ ಜವಾಬ್ದಾರಿಯನ್ನು ತಮ್ಮ ಬೆಂಬಲಿಗರಿಗೆ ಒಪ್ಪಿಸುತ್ತಿದ್ದಾರೆ.
ಕೋಲಾರ ಕಾಂಗ್ರೆಸ್ನ ಮತ್ತೂಂದು ಗುಂಪು ರಮೇಶ್ಕುಮಾರ್ ನೇತೃತ್ವದಲ್ಲಿ ವಿವಿಧ ಮುಖಂಡರು ಸಮಾವೇಶ ನಡೆಯುವ ಸ್ಥಳದಲ್ಲಿ ಸಿದ್ಧತೆಗಳ ಉಸ್ತುವಾರಿಯನ್ನು ಹೊತ್ತುಕೊಂಡಿದ್ದಾರೆ.
ಕೋಲಾರ ಸಮಾವೇಶದ ಬಳಿಕ ಇದೇ ರೀತಿಯ ಅನೇಕ ಸಮಾವೇಶಗಳನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸಲು ಕೆಪಿಸಿಸಿ ತೀರ್ಮಾನಿಸಿದೆ. ಈ ಮೂಲಕ ಅನರ್ಹತೆಯಿಂದ ರಾಹುಲ್ಗಾಂಧಿ ದೃತಿಗೆಟ್ಟಿಲ್ಲ ಎಂಬ ಸಂದೇಶ ರವಾನಿಸುವುದರ ಜತೆಗೆ, ಇದೇ ವಿಚಾರವನ್ನು ಚುನಾವಣ ಪ್ರಚಾರದ ಅಸ್ತ್ರವನ್ನಾಗಿಸಿಕೊಳ್ಳಲು ಕಾಂಗ್ರೆಸ್ ಸಜ್ಜಾಗುತ್ತಿದೆ.
ಕೋಲಾರ ಕ್ಷೇತ್ರ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆಂಬ ಕಾರಣಕ್ಕಾಗಿ ರಾಜ್ಯದ ಗಮನ ಸೆಳೆದಿತ್ತು. ಈಗ ರಾಹುಲ್ಗಾಂಧಿ ಅದೇಕೋಲಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೋಲಾರದಿಂದಲೂ ಎರಡನೇ ಕ್ಷೇತ್ರವಾಗಿ ಸ್ಪರ್ಧಿಸುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಸಿದ್ದರಾಮಯ್ಯ ಬೆಂಬಲಿಗರು ಯೋಜಿಸಿದ್ದಾರೆ.
ಸಿದ್ದರಾಮಯ್ಯ ಕೋಲಾರದಿಂದಲೂ ಸ್ಪರ್ಧಿಸಲೇ ಬೇಕು ಎಂದು ಪಟ್ಟು ಹಿಡಿದಿರುವ ಮಾಜಿ ಸ್ಪೀಕರ್ ರಮೇಶ್ಕುಮಾರ್ ನೇತೃತ್ವದ ಗುಂಪು ಈಗಾಗಲೇ ಈ ಕುರಿತು ಹೈಕಮಾಂಡ್ ಮೇಲೂ ಒತ್ತಡ ಹೇರುತ್ತಿದೆ. ಕೋಲಾರಕ್ಕೆ ರಾಹುಲ್ ಗಾಂಧಿ ಬರುವ ಮುನ್ನವೇ ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಕೋಲಾರದಿಂದ ಸಿದ್ದರಾಮಯ್ಯ ಹೆಸರು ಪ್ರಕಟವಾಗಬೇಕು. ಇಲ್ಲವಾದರೆ ಎಪ್ರಿಲ್ 5 ಸಮಾವೇಶದಲ್ಲಿ ರಾಹುಲ್ಗಾಂಧಿಯೇ ಸಿದ್ದರಾಮಯ್ಯ ಕೋಲಾರದಿಂದಲೂ ಸ್ಪರ್ಧಿಸುತ್ತಾರೆಂದು ಘೋಷಿಸಬೇಕೆಂದು ಬಯಸುತ್ತಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಆರಂಭದಲ್ಲಿಯೇ ಕೋಲಾರದಿಂದ ಆರಂಭವಾಗುತ್ತಿರುವ ಮೊದಲ ಕಾಂಗ್ರೆಸ್ ಪ್ರಚಾರ ಸಭೆಗೆ ರಾಹುಲ್ಗಾಂಧಿಯೇ ಆಗಮಿಸುತ್ತಿರುವುದು ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ.
-ಕೆ.ಎಸ್.ಗಣೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ