JDS ಬಂಡಾಯ: ಸಂಧಾನಕ್ಕೆ ಎಚ್ ಡಿಡಿ ಪುತ್ರ ರಮೇಶ್ ಎಂಟ್ರಿ
ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್
Team Udayavani, Apr 24, 2023, 7:10 AM IST
ಮಂಡ್ಯ: ಜಿಲ್ಲಾ ಕೇಂದ್ರ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದಲ್ಲಿ ಎದ್ದಿರುವ ಅಸಮಾಧಾನದ ಬಗ್ಗೆ ಸಂಧಾನ ನಡೆಸಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪುತ್ರ ಡಾ.ರಮೇಶ್ ಎಂಟ್ರಿ ಕೊಟ್ಟಿದ್ದು, ಶಾಸಕ ಎಂ.ಶ್ರೀನಿವಾಸ್ ಜತೆ ಮಾತುಕತೆ ನಡೆಸಿದರು.
ಶಾಸಕ ಶ್ರೀನಿವಾಸ್ ಮನೆಗೆ ಭೇಟಿ ನೀಡಿದ ಡಾ.ರಮೇಶ್, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾಖಾನ್, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಅಭ್ಯರ್ಥಿ ಬಿ.ಆರ್.ರಾಮಚಂದ್ರು ನಿಯೋಗದೊಂದಿಗೆ ಮನವೊಲಿಸುವ ಪ್ರಯತ್ನ ಮಾಡಿದರು.
ಜೆಡಿಎಸ್ ಟಿಕೆಟ್ ಅನ್ನು ಮನ್ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರುಗೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ್ ಬಂಡಾಯ ಎದ್ದು, ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ ಡಾ.ರಮೇಶ್ ನಿಯೋಗ, ಅಧಿಕೃತ ಅಭ್ಯರ್ಥಿ ರಾಮಚಂದ್ರುಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿರುವ ಶ್ರೀನಿವಾಸ್, ಸೋಮವಾರ ನಡೆಯಲಿರುವ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು, ಮುಖಂಡರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದರಿಂದ ನಿಯೋಗ ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್ ತೆರಳಿತು.