ಜೀವ ವಿಕಾಸ ಪರಿಧಿಯ ಸುತ್ತ ಮೃತ್ಯುವಿನ ದಿಗ್ಬಂಧ


Team Udayavani, Jul 8, 2018, 6:00 AM IST

v-5.jpg

ಅಡಿಗರು ಸಾವಿನ ಬಗ್ಗೆ ನೇರವಾಗಿ ಬರೆದ ಕವಿತೆಯ ಹೆಸರು- ದ್ವಂದ್ವ-ದಿಗ್ಬಂಧ. ಇದು ಅಡಿಗರು ಬರೆದ ಕೊನೆಯ ಕವಿತೆ. ಕವಿಯ ಚರಮ ಶ್ಲೋಕ. ಕವಿ ತನ್ನ ಸಾವಿನ ಏಳು ದಿನಗಳ ಮುನ್ನ ಬರೆದ ಕವಿತೆ ಇದು. ಈ ಕವಿತೆ ಮಾತ್ರ ಆಶ್ಚರ್ಯವುಂಟುಮಾಡುವಂತೆ ನವ್ಯಕವಿತೆಯೇ ಆಗಿದೆ. ಆಶ್ಚರ್ಯವೇಕೆಂದರೆ ಕವಿ; ತನ್ನ ಕೊನೆಗಾಲದಲ್ಲಿ ಬರೆದ ಅನೇಕ ಕವಿತೆಗಳಲ್ಲಿ ಮರಳಿ ಭಾವಗೀತೆಯತ್ತ ತಿರುಗಿದಂತೆ ಅನ್ನಿಸುತ್ತಿತ್ತು. ವಿಮರ್ಶಕರು ಅಂಥ ಮಾತುಗಳನ್ನು ಆಡಿದ್ದರು ಕೂಡ. ಅಲ್ಲದೆ ಕವಿ ತೀರ ಅಸ್ವಸ್ಥರಾಗಿದ್ದರು. ಸಾವಿನ ಅಂಚಿನಲ್ಲಿದ್ದರು. ಸನಿಹದಲ್ಲೇ ಸುಳಿಯುತ್ತಿತ್ತು ಸಾವು. ಇದು ಕವಿಗೂ ತಿಳಿಯುತ್ತಿತ್ತು. ಮೈ-ಮನಸ್ಸು ಮೆತ್ತಗಾಗಿತ್ತು. ಮೆತ್ತಗಾದಾಗ ಆಧಾರಕ್ಕಾಗಿ ಆತುಕೊಳ್ಳುವ ದೇವರು-ಭಕ್ತಿ-ಅಧ್ಯಾತ್ಮ ಇತ್ಯಾದಿ ಭಾವಸಾಮಗ್ರಿಗಳ ಪರಿಚಯವೂ ಕವಿಗೆ ಇತ್ತು. ಹೊಸಕವಿತೆಯ ನವ್ಯಪಥದಲ್ಲಿ ನಡೆಯುತ್ತ ಈ ಭಾವಸಾಮಗ್ರಿಗಳನ್ನೆಲ್ಲ ಅವರು ಸಂದೇಹಿಸಿದ್ದರು, ಪ್ರಶ್ನಿಸಿದ್ದರು. ತನ್ನ ಅನುಭವವನ್ನಲ್ಲದೆ ಇನ್ನಾವುದನ್ನು ನೆಚ್ಚಲಿ? ಎಂದು ಆರ್ತವಾಗಿ ಕೇಳಿದ್ದರು. ಯಾವುದನ್ನೋ ನೆಚ್ಚಿ ಈ ಬದುಕು ಹುಸಿಯಾಗಬೇಕೆ? ಎಂದು ಕೇಳಿದ್ದರು. ಈಗ ಸಾವಿನ ಸನಿಯದಲ್ಲಿ ಈ ಎಲ್ಲ ನಿಲುವುಗಳ ಅಗ್ನಿಪರೀಕ್ಷೆಯಾಗಲೇಬೇಕಿತ್ತು. ದ್ವಂದ್ವ-ದಿಗ್ಬಂಧ  ಕವಿತೆ ಏನು ಹೇಳುತ್ತದೆ?

“ಜೀವದ ವಿಕಾಸ ಪರಿಧಿಯ ಸುತ್ತ ಮೃತ್ಯುವಿನ ದಿಗ್ಬಂಧ’ ಎಂದು ಕವಿತೆ ಶುರುವಾಗುತ್ತದೆ. ಜೀವಕ್ಕೊಂದು ವಿಕಾಸ ಇದೆ. ನಿಜ. ಆದರೆ ಆ ವಿಕಾಸಕ್ಕೊಂದು ಪರಿಧಿ-ಎಲ್ಲೆ ಇದೆ. ಆ ಎಲ್ಲೆ ಎಂದರೆ ಅದು ಮೃತ್ಯುವೇ ಎನ್ನುತ್ತದೆ ಕವಿತೆ. ಈ ಹಿಂದೆ ನೀ ಬಳಿಯೊಳಿರುವಾಗ್ಗೆ ಕವಿತೆಯಲ್ಲಿ “ಪರಿಧಿ’ಯನ್ನು ಬೇರೆಯೇ ಒಂದು ರೀತಿಯಲ್ಲಿ ಕವಿ ನೋಡಿದ್ದರು. “ತ್ರಿಜ್ಯಗಳ ಅಸಂಖ್ಯಕ್ಕೆ ಗುರಿ-ಮುರಿ-ತಣಿವು ತರುವ ಪರಿಧಿಯ ಸಾಮತೇಜಸ್ಸು’ ಎಂದು ಅದ್ಭುತವಾಗಿ ಹೇಳಿದ್ದರು. ಈಗಲಾದರೋ, ಗುರಿ-ಮುರಿ-ತಣಿವು ಎನ್ನುವ ಪದಗಳಿಗೆ ಸಾವಿಗೆ ಸಂಬಂಧಿಸಿದ ಅರ್ಥಚ್ಛಾಯೆಗಳೂ ಹೊಳೆದು ಪರಿಧಿಗೆ ರುದ್ರತೇಜಸ್ಸು ಬಂದಿದೆ !

ಜೀವದ ವಿಕಾಸ ಮತ್ತು ಮೃತ್ಯುವಿನ ದಿಗ್ಬಂಧ ಇವು ದೊಡ್ಡದೊಂದು ದ್ವಂದ್ವವಾಗಿ ಕವಿಯನ್ನು ಕಾಡುತ್ತಿದೆ. ಜೀವಂತಿಕೆ ಮತ್ತು ಸಾವು- ಇವು ಪರಸ್ಪರ ಸೇರಲಾರವು. ಇವು “ಒಂದರ ವಿರುದ್ಧ ಇನ್ನೊಂದು’. ಈ ಪರಸ್ಪರ ವಿರೋಧ ಇಲ್ಲೇ ಅನುಭವಕ್ಕೆ ಬರುತ್ತಿದೆ.
ಹೇಗೆಂದರೆ,
“”ಅನಂತಮುಖೀ ಅಂತರಂಗದ ಅನಿರ್ಬದ್ಧ ಸಂಚಾರದ ವಿರುದ್ಧ ಗಟ್ಟಿ ನಿಂತಿದೆ ನೆಲಕ್ಕಂಟಿ ಈ ಜಡ ಶರೀರ”
ಇದು ವಿರೋಧಾಭಾಸವಲ್ಲವೆ? ದ್ವಂದ್ವವೇ ಅಲ್ಲವೆ?- ಇಷ್ಟೇ ಅಲ್ಲ.
“”ಬದುಕು ಸಾವುಗಳು, ಸುಖ-ದುಃಖ, ಪ್ರೀತಿ-ದ್ವೇಷ- ಒಂದಲ್ಲ ಇನ್ನೊಂದು ಅಲ್ಲೋ ಇಲ್ಲೋ ತಕ್ಕಡಿಯ ಎರಡೂ ತಟ್ಟೆಯಲ್ಲಿ ಪರಸ್ಪರ ವಿರುದ್ಧ ದ್ವಂದ್ವಗಳು.
ಸರ್ವದಾ ತೂಗುತ್ತವೆ. ಒಂದು ಕೆಳಕೆಳಕ್ಕೆ ಇನ್ನೊಂದು ಮೇಲಕ್ಕೆ ಸರ್ವದಾ ತುಯ್ಯುತ್ತವೆ”
ದ್ವಂದ್ವಗಳ ಈ ಚಿತ್ರವನ್ನು ಪರಿಭಾವಿಸುತ್ತಲೇ ಕವಿಗೆ ಇನ್ನೊಂದು ಅಂಶವೂ ಹೊಳೆದಿದೆ: ದ್ವಂದ್ವವೆಂದಾಗ ಅದೇ; ತಕ್ಕಡಿಯ ಸಮತೂಕವೂ ಆಗಿ ಪರಿಣಮಿಸುವುದು ಎಂದು ಹೊಳೆದು, ದ್ವಂದ್ವವಿಲ್ಲದೆ ಸಮತೂಕವಿಲ್ಲ ಎಂದೂ ಹೊಳೆದು, ಆದುದರಿಂದಲೇ ಸಮತೂಕ-ಸಮತ್ವ ಎನ್ನುವುದು ದ್ವಂದ್ವದ ಸೃಜನಾತ್ಮಕ ರೂಪವೆಂದೂ ಹೊಳೆದು, ಸಮತೂಕವೆಂದರೆ ಎರಡರ ಮಟ್ಟವೂ ಒಂದೇ ಆಗುವುದು- ಹಾಗೆ ಆದಾಗಲೇ ಅದು ನಿಜವಾದ “ಸಮಾಧಾನ’ ಎಂದೂ ಹೊಳೆದು ಒಂದು ಕ್ಷಣ ತನಗೇ ದಿಗ್ಭ್ರಮೆಯಂಥ ಅಚ್ಚರಿಯಾಗಿದೆ !

ಹೀಗೆ ಅಚ್ಚರಿಯುಂಟುಮಾಡಿ ಕಂಗೆಡಿಸುವುದೇ ಹೊಳಹಿನ ಲಕ್ಷಣ !
ಮರುಕ್ಷಣ-ಇಲ್ಲಿ ಸಮತೂಕ-ಸಮಾಧಾನ ಎಂದಾದರೂ ಕಂಡಿದೆಯೇನು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಏಕೆಂದರೆ, ಇಲ್ಲಿ ಒಂದಾದ ಮೇಲೆ ಒಂದು ಎಂಬಂತೆ ಎಲ್ಲ ನಡೆಯುತ್ತಿದೆ. ಎರಡೂ ಜೊತೆ ಜೊತೆಗೆ ನಡೆದಿದೆಯೇನು?
“”ಹೇಮಂತದಂತ್ಯದಲ್ಲೇ ಬಂದು ಚಿಗುರುವ ವಸಂತ,
ಗ್ರೀಷ್ಮದ ಮಹಾತಾಪವನ್ನೇ ನುಂಗಿ ಹನಿಹನಿಯಾಗಿ ಮಂದಯಿಸಿ ಭೋರ್ಗರೆವ ಸುರಿಮಳೆಯ ಧಾರೆ,
ಒಂದೊಂದೇ ಈ ರೀತಿ ಬಂದು ರಂಗಸ್ಥಳಕ್ಕೆ
ಕುಣಿವಂಥ ಈ ದ್ವಂದ್ವಗಳೇ ಈ ಜಗದ ಮೂಲ ಸ್ವರೂಪ”
ಇದು ಹೀಗೆಂದು ಎಲ್ಲರಿಗು ತಿಳಿದಿರಲೇಬೇಕು. ತಿಳಿದಿದೆ ಎನ್ನುತ್ತಾರೆ ಕವಿ. ಯಾರಿಗೆಲ್ಲ ತಿಳಿದಿದೆ?

“”ಕಂಡಿಲ್ಲದಿದ್ದರೂ ಕಂಡೆನೆನ್ನುವ ಹಾಗೆ
ಬದ್ಧನಾಗಿದ್ದರೂ ಅನಿರ್ಬದ್ಧ ಎನ್ನುವ ಹಾಗೆ
ಬಡಬಡಿಸುವ ಅಧ್ಯಾತ್ಮವಾದಿಗೂ ಗೊತ್ತುಂಟು
ನಮ್ಮಿà ಜಗತ್ತು ದ್ವಂದ್ವಾವಳಿಯ ಛಂದ”
ಹಾಗಾದರೇನು ಗತಿ?
ಈಗ ಹೇಳುತ್ತಾರೆ ಕವಿತೆಯ ಕೊನೆಯ ಮಾತುಗಳನ್ನು.
“”ಸತ್ತ ಮೇಲೇ ಬಹುಶಃ ತೊಲಗುವುದು ಈ ದ್ವಂದ್ವ ನಿರ್ಬಂಧ
ಸಾಯದೇ ತಿಳಿಯದದು. ಸತ್ತಮೇಲೆ ಬಂದವರು ಯಾರೂ ಇಲ್ಲ.

ಬಂದರೆ ಅವರ ಮಾತು ಬದುಕಿರುವವರಿಗಂತೂ ಅಲ್ಲವೆ ಅಲ್ಲ”
ಈ ಮಾತುಗಳು ಸ್ಪಷ್ಟವಾಗಿವೆ. ಬದುಕೆನ್ನುವುದೇ ಒಂದು ದ್ವಂದ್ವಾತ್ಮಕವಾದ ವಾಸ್ತವವಾಗಿದೆ. ಬದುಕಿನ ಇನ್ನೊಂದು ತುದಿ ಎಂದರೆ ಸಾವು. ಬದುಕೆಂಬ ಇಂದ್ರಿಯಾನುಭವಕ್ಕೆ ವಿರುದ್ಧವಾಗಿ ನಿಂತಿರುವ, ಎಲ್ಲ ಅನುಭವಗಳಾಚೆ ಇರುವ ಸಾವು. ಅದು ಅನುಭವಗಳಾಚೆ ಇರುವುದರಿಂದ ಸಾವಿನಲ್ಲಿ ಎಲ್ಲ ದ್ವಂದ್ವಗಳೂ ಮುಗಿಯಬಹುದೇನೋ. ಆದರೆ ಅದು ಅನುಭವಿಸದೆ ಅಂದರೆ ಸಾಯದೆ ತಿಳಿಯದು.  ಸಾವಿನ ಅನುಭವ ಪಡೆದವರು ಇಲ್ಲಿರಲು ಸಾಧ್ಯವೆ? ಒಂದೊಮ್ಮೆ ವಾದಕ್ಕಾಗಿ ಅಂಥವರಿರಬಹುದು ಎಂದೊಪ್ಪಿದರೂ ಅಂಥವರು ಮಾತನಾಡಿದರೆ ಅದು ಬದುಕಿರುವವರನ್ನು , ಬದುಕನ್ನು ಉದ್ದೇಶಿಸಿದ ಮಾತಾಗಿರುವುದು ಸಾಧ್ಯವೆ?
ಆರುವ ದೀಪ ಒಮ್ಮೆ ಝಗ್ಗನೆ ಹೊತ್ತಿ ಉರಿಯುವುದಂತೆ. ಅಂಥ ಕ್ಷಣದಲ್ಲಿ ಹುಟ್ಟಿ ಬಂದ ಕವಿತೆ ಇದು. ಆ ಕೊನೆಯ ಕ್ಷಣದ ಉರಿಯುವಿಕೆಯಲ್ಲಿ ವ್ಯಕ್ತಿಯ ಸ್ವಭಾವವು ಪ್ರಕಟವಾಗುತ್ತದೆ. ಅಡಿಗರು ನಡೆದುಬಂದ ದಾರಿಯನ್ನು ಇಡಿಯಾಗಿ ತೊರೆದು ಹೊಸ ಹಾದಿಗೆ ಹೊರಳಿದ ಸಂದರ್ಭವೂ ಹೀಗೇ ಇತ್ತು. ಜೀವನ್ಮರಣ ಪ್ರಶ್ನೆಯಾಗಿತ್ತು !

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿಯುವಂತೆ ಕರೆದ ಮೋಹನಮುರಲಿಯ ಕರೆಯನ್ನು ಒಂದು ಕಾಲದಲ್ಲಿ ಕೇಳಿದ್ದ ಕವಿ, ಈಗ ಮೋಹನಮುರಲಿಯ ಸ್ವರ ತರಂಗಗಳು ಹರಿದುಬಂದ ಗಾಳಿ ಬೀದಿಯ ನಡೆಯನ್ನು ತಿರಸ್ಕರಿಸಿ ಹೊಸಹಾದಿಯನ್ನು ತುಳಿದು ಇಷ್ಟು ಕಾಲದ ಮೇಲೆ, ಇರುವುದೆಲ್ಲವ ಬಿಟ್ಟು ನಡೆಯಲೇಬೇಕಾದ ಹೊತ್ತಿನಲ್ಲಿ ಆಚೆ ಇನ್ನೇನೋ ಇದೆ ಎಂದು ನಂಬಲಾರರು. ನಂಬಿಸಲಾರರು. ಅಲ್ಲಿ ಮೋಹನಮುರಲಿಯ ನಾದ ಕೇಳಬಹುದೇನೋ ಎಂದು ಸಂದೇಹಿಸಲಾರರು ಕೂಡ. ತನ್ನ ಅನುಭವವನ್ನಷ್ಟೆ ತಾನು ಮೈಯ್ಯಲ್ಲಿ ಹೊತ್ತಿದ್ದೇನೆ ಎನ್ನುವರು. ಅಡಿಗರು ಸಾವನ್ನು ನೆನೆವ ಹೊತ್ತಿನಲ್ಲಿ ಯಾವ ರಹಸ್ಯಮಯತೆಯತ್ತಲೂ ಮನಗೊಟ್ಟಿಲ್ಲ ! ಕವಿತೆ ಈ ಅರ್ಥದಲ್ಲಿ ತುಂಬ ಪ್ರಾಮಾಣಿಕವಾಗಿದೆ. ಬದುಕಿನಲ್ಲೇ ಕಾಲೂರಿ ನಿಂತಿದೆ. ಬದುಕು, ಬದುಕನ್ನು ಕುರಿತು ಹೇಳಬಹುದಷ್ಟೇ ವಿನಾ ಅದು ಸಾವಿನ ಕುರಿತು ಹೇಳುವಂಥದು ಕೂಡ ಏನೂ ಇಲ್ಲ ಎಂದು ಕಂಡುಕೊಂಡು ತನ್ನಲ್ಲೇ ಬದುಕು ಮೌನವಾಗುವ ಹೊತ್ತು ಇದು. ಸಾವನ್ನು ಕೂಡ ಎಲ್ಲವೂ ಮೌನವಾಗುವ ಹೊತ್ತು ಎಂದು ಭಾವಿಸಿದೆವಾದರೆ ತನ್ನ ಮೌನದಲ್ಲೇ ಬದುಕು, ಸಾವಿನ ಅರ್ಥವನ್ನು ಪಡೆಯಬಹುದೇನೋ. ಆಗ ದ್ವಂದ್ವವು “ಸಮತೂಕ’ದ ಇನ್ನೊಂದು ಸ್ಥಿತಿಯನ್ನು  ಹೊಂದಲಾದೀತು. ಕವಿತೆ ಈ ಕುರಿತು ಯಾವ ಬಾಹ್ಯಸೂಚನೆಯನ್ನು ಕೊಡದೇ ಇದ್ದರೂ ತನ್ನ ಅನುಭವದಲ್ಲಿಯೇ ತಾನು ನೆಚ್ಚಿದ್ದುದೇ ಕಾರಣವಾಗಿ-ತನ್ನ ಮೈತೂಕದಲ್ಲಿಯೇ ಇಡಿಯಾಗಿ ಮುಳುಗಿದ್ದ ಒಂದು ವಸ್ತುವಿಗೆ ಅಂಥದೇ ಇನ್ನೊಂದು ವಸ್ತು ಎದುರಾದಾಗ ಮಾತ್ರ “ಸಮತೂಕ’ ಎನ್ನುವ ಅರಿವು ಬರುವಂತೆ- “ದ್ವಂದ್ವ’ವು ಅರ್ಥವಾಗದು ಎನ್ನುತ್ತಲೇ “ಸಾವೂ’ ಅರ್ಥವಾಗದು ಎಂಬ ಅಲ್ಲಮನ ಮಾತು ನೆನಪಾಗುತ್ತದೆ.

“”ಸತ್ತು ಮುಂದೆ ದೇವರ ಕೂಡಿಹೆವೆಂಬಿರಿ ಸಾಯದ ಮುನ್ನ ಸತ್ತಿಪ್ಪಿರಿ”
ಈ ಮಾತಿನ ಇನ್ನೊಂದು ಮುಖ ಅಡಿಗರ ಕವಿತೆಯಲ್ಲಿದೆ. ಸಾವಿನ ಮಾತು ಬದುಕಿಗೆ ಅಲ್ಲ. ಬದುಕಿನ ಮಾತು ಸಾವಿಗೂ ಅಲ್ಲ ಎಂಬುದು ಕವಿತೆಯ ಮಾತು. ಪರಸ್ಪರ ನಿರಾಕರಣೆಯ ಗುಣ ಎರಡು ಕಡೆಯೂ ಒಂದೇ ಆಗಿರುವುದಾಗಿ ತನ್ನ ಅರಿವು ಇನ್ನೊಂದರ ಅರಿವೂ ಆಗಿ ಮಾರ್ಪಡುತ್ತದೆ!
ಇದು ನಿಸ್ಸಂದೇಹವಾಗಿ ನವ್ಯ ಕವಿತೆ. ಮತ್ತೆ ಭಾವಗೀತೆಯ ದಿಕ್ಕಿನತ್ತ ಹೊರಳಿದ ರೇನೋ ಎಂದುಕೊಳ್ಳುವಾಗಲೇ ಕವಿ ಮತ್ತೆ ಎಚ್ಚರಾದರು. ಅದು ವಿದಾಯದ ಎಚ್ಚರವೂ ಆಗಿತ್ತು!

ಲಕ್ಷ್ಮೀಶ ತೋಳ್ಪಾಡಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.