IT ದಾಳಿ : ಪ್ರಧಾನಿ ಮೋದಿ ವಿರುದ್ಧ ಮುಗಿಬಿದ್ದ ಕೈ-ತೆನೆ ಮುಖಂಡರು
Team Udayavani, Mar 28, 2019, 8:53 PM IST
ಗುರುವಾರ ಬೆಳ್ಳಂಬೆಳಿಗ್ಗೆ ಜೆ.ಡಿ.ಎಸ್. ನಾಯಕರ ನಿವಾಸ ಮತ್ತು ಕಛೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಗೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ – ಜೆ.ಡಿ.ಎಸ್. ಕೆಂಡಾಮಂಡಲವಾಗಿದೆ. ಈ ದಾಳಿ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂಬ ಗಂಭೀರ ಆರೋಪವನ್ನು ಎರಡೂ ಪಕ್ಷಗಳ ಮುಖಂಡರು ಮಾಡಿದ್ದಾರೆ. ಮತ್ತು ಗುರುವಾರ ನಗರದಲ್ಲಿರುವ ಆದಾಯ ತೆರಿಗೆ ಇಲಾಖೆಯ ಕಛೇರಿಯ ಎದುರು ಕಾಂಗ್ರೆಸ್-ಜೆಡಿಎಸ್ ದಿಢೀರ್ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಪರಮೇಶ್ವರ್, ಕೆ.ಪಿ.ಸಿ.ಸಿ. ಅಧ್ಯಕ್ಷ ದಿನೇಶ್ ಗುಂಡೂರಾವ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ಧರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಎರಡೂ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಜಮಾಯಿಸಿದ್ದರು. ಆದಾಯ ತೆರಿಗೆ ಇಲಾಖೆ, ಕೇಂದ್ರ ಸರಕಾರ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗತೊಡಗಿದರು.